ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಂತಹ ಸ್ಥಳಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ ಅವುಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಶಾಲೆಗಳು, ಆಸ್ಪತ್ರೆಗಳು ಮೊದಲಾದ ಸ್ಥಳಗಳಲ್ಲಿ ನಾಯಿ ಕಡಿತದ ಘಟನೆಗಳು ಆತಂಕಕಾರಿಯಾಗಿ ಹೆಚ್ಚುತ್ತಿರುವ ನಡುವೆ, ಸಾರ್ವಜನಿಕ ಸುರಕ್ಷತೆ, ಆರೋಗ್ಯ ಮತ್ತು ಬೀದಿ ನಾಯಿಗಳ ನಿರ್ವಹಣೆಯ ಹಿತದೃಷ್ಟಿಯಿಂದ ಈ ನಿರ್ದೇಶನಗಳನ್ನು ನೀಡುವುದು ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ ವಿ ಅಂಜಾರಿಯಾ ಅವರ ತ್ರಿಸದಸ್ಯ ಪೀಠ ಹೇಳಿದೆ.
ಇದನ್ನು ಓದಿದ್ದೀರಾ? ಗದಗ | ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ
ಅಂತಹ ನಾಯಿಗಳನ್ನು ಗೊತ್ತುಪಡಿಸಿದ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ನಾಯಿ ಕಡಿತದ ಘಟನೆಗಳನ್ನು ತಡೆಗಟ್ಟಲು ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಆವರಣಕ್ಕೆ ಬೀದಿ ನಾಯಿಗಳು ಪ್ರವೇಶಿಸುವುದನ್ನು ತಡೆಯುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ತಮ್ಮ ಸ್ಥಳೀಯ ಅಥವಾ ಪುರಸಭೆ ಅಧಿಕಾರಿಗಳ ಮೂಲಕ, ಎರಡು ವಾರಗಳ ಅವಧಿಯಲ್ಲಿ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ವೈದ್ಯಕೀಯ ಕಾಲೇಜುಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳು ಸೇರಿದಂತೆ ಗುರುತಿಸಬೇಕು ಎಂದು ಪೀಠ ಹೇಳಿದೆ.
ಪ್ರತಿಯೊಂದು ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ರೈಲು ನಿಲ್ದಾಣ, ಬಸ್ ನಿಲ್ದಾಣದ ನಿರ್ವಹಣೆಯು ಆವರಣದ ಶುಚಿತ್ವಕ್ಕೆ ಮತ್ತು ಬೀದಿ ನಾಯಿಗಳು ಪ್ರದೇಶಕ್ಕೆ ಪ್ರವೇಶಿಸದಂತೆ ನೋಡಿಕೊಳ್ಳಲು ಜವಾಬ್ದಾರಿಯುತ ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಎಂದೂ ಕೋರ್ಟ್ ಈ ಸಂದರ್ಭದಲ್ಲಿ ಸೂಚಿಸಿದೆ.
ಹಾಗೆಯೇ ಈ ಪ್ರದೇಶಗಳಲ್ಲಿ ಕಂಡುಬರುವ ಬೀದಿ ನಾಯಿಗಳನ್ನು ಪ್ರಾಣಿ ಜನನ ನಿಯಂತ್ರಣ ನಿಯಮಗಳಿಗೆ ಅನುಸಾರವಾಗಿ ಸರಿಯಾದ ಸಂತಾನಹರಣ ಮತ್ತು ಲಸಿಕೆ ಹಾಕಿದ ನಂತರ ಗೊತ್ತುಪಡಿಸಿದ ಆಶ್ರಯಕ್ಕೆ ಸ್ಥಳಾಂತರಿಸಬೇಕು. ನಾಯಿಗಳನ್ನು ಮತ್ತೆ ಅದೇ ಸ್ಥಳದಲ್ಲಿ ಬಿಡಬಾರದು ಎಂದು ಪೀಠ ಆದೇಶಿಸಿದೆ. ಹಾಗೆಯೇ ಪ್ರಕರಣದ ವಿಚಾರಣೆಯನ್ನು ಎಂಟು ವಾರ ಮುಂದೂಡಿದೆ.





