ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ನಡೆಸುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಐ(ಎಂ), ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹೊಸ ಅರ್ಜಿಗಳಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಹಾಗೆಯೇ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಮದ್ರಾಸ್ ಮತ್ತು ಕೋಲ್ಕತ್ತಾ ಹೈಕೋರ್ಟ್ಗೆ ತಿಳಿಸಿದೆ. ಹಾಗೆಯೇ ತಮಿಳುನಾಡಿನಲ್ಲಿ ಎಸ್ಐಆರ್ ಬೆಂಬಲಿಸಿ ಎಐಎಡಿಎಂಕೆ ಸಲ್ಲಿಸಿರುವ ಅರ್ಜಿಯ ವಿಚಾರಣೆಗೂ ಅವಕಾಶ ನೀಡಿದೆ.
ಇದನ್ನು ಓದಿದ್ದೀರಾ? ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ನವೆಂಬರ್ನಿಂದ ಮತ್ತು ಮುಂದಿನ ವರ್ಷದ ಫೆಬ್ರವರಿ ನಡುವೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ನ ಎರಡನೇ ಹಂತವನ್ನು ನಡೆಸಲಾಗುವುದು ಎಂದು ಅಕ್ಟೋಬರ್ 27ರಂದು ಚುನಾವಣಾ ಆಯೋಗ ಘೋಷಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಛತ್ತೀಸ್ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ನಡೆಸಲು ಇಸಿ ಸಜ್ಜಾಗಿದೆ.
ಈ ಪೈಕಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ಹಾಗೆಯೇ 2026ರಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂಗೆ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರತ್ಯೇಕವಾಗಿ ಘೋಷಿಸಲಾಗುವುದು ಎಂದೂ ಚುನಾವಣಾ ಆಯೋಗ ಹೇಳಿದೆ. ಎರಡನೇ ಹಂತದ ಎಸ್ಐಆರ್ ಪ್ರಕ್ರಿಯೆ ನವೆಂಬರ್ 4ರಂದು ಪ್ರಾರಂಭವಾಗಿದ್ದು ಡಿಸೆಂಬರ್ 4ರವರೆಗೆ ಮುಂದುವರಿಯಲಿದೆ. ಡಿಸೆಂಬರ್ 9ರಂದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಲಿದ್ದು, ಫೆಬ್ರವರಿ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಈಗಾಗಲೇ ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ನಡೆಸಲಾಗಿದ್ದು, ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಡೆಸಲಾದ ಈ ಪ್ರಕ್ರಿಯೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರಿಯಾದ ದಾಖಲೆಗಳನ್ನು ನೀಡಲಾಗದೆ ಅದೆಷ್ಟೋ ಬಡ ಜನರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಂಡಿರುವುದರ ವಿರುದ್ಧ ವಿಪಕ್ಷಗಳು ಧ್ವನಿ ಎತ್ತಿದೆ. ಚುನಾವಣೆಗೂ ಮುನ್ನ ವಿರುದ್ಧದ ಮತದಾರರ ಹಕ್ಕನ್ನು ಕಸಿಯಲೆಂದೇ ಈ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ವಿಪಕ್ಷಗಳು ದೂರಿದೆ. ಇದು ಮತಗಳ್ಳತನದ ಒಂದು ಭಾಗ ಎಂಬ ಆರೋಪವನ್ನೂ ಮಾಡಿದೆ.





