ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್ ಸೆಂಗರ್ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ದೆಹಲಿ ಹೈಕೋರ್ಟ್ ಡಿಸೆಂಬರ್ 23ರಂದು ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು, ಕುಲದೀಪ್ ಶಿಕ್ಷೆಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ಅಮಾನತುಗೊಳಿಸಿತ್ತು.
ಇದನ್ನು ಓದಿದ್ದೀರಾ? ಬೆಚ್ಚಿ ಬೀಳಿಸಿದ್ದ ಉನ್ನಾಂವ್ ಅತ್ಯಾಚಾರ: ಯುಪಿಯ ಬಿಜೆಪಿ ನಾಯಕ ಕುಲದೀಪ್ ಜೀವಾವಧಿ ಶಿಕ್ಷೆ ಅಮಾನತು!
ಅಪರಾಧ ಸಾಬೀತಾಗಿ ಶಿಕ್ಷೆಗೆ ಗುರಿಯಾಗಿರುವ ಪ್ರಭಾವಶಾಲಿ ವ್ಯಕ್ತಿಗೆ ಜಾಮೀನು ನೀಡಿರುವುದು ಮಾತ್ರವಲ್ಲದೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಅಷ್ಟು ಮಾತ್ರವಲ್ಲದೆ ಸಂತ್ರಸ್ತೆಯ ತಂದೆಯ ಪೊಲೀಸ್ ಕಸ್ಟಡಿ ಪ್ರಕರಣದಲ್ಲಿ ಅಪರಾಧಿಯೂ ಸೆಂಗರ್. ಹಾಗಾಗಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ರಕ್ಷಣೆಯ ಪ್ರಶ್ನೆ ಹುಟ್ಟಿತ್ತು. ಉನ್ನಾಂವ್ ಸಂತ್ರಸ್ತೆ ಕುಟುಂಬ ಮತ್ತು ಮಹಿಳಾಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಈ ನಡುವೆಯೇ ಸಿಬಿಐ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂ ಸಿಬಿಐ ಅರ್ಜಿಯನ್ನು ಪುರಸ್ಕರಿಸಿ, ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.
ಮಹಿಳಾಪರ ಹೋರಾಟಗಾರ್ತಿ ಯೋಗಿತಾ ಭಯಾನ ಆದೇಶವನ್ನು ಸ್ವಾಗತಿಸಿದ್ದು, ಸುಪ್ರೀಂ ಕೋರ್ಟ್ ಮತ್ತು ಮಾಧ್ಯಮಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಸತ್ಯಮೇವ ಜಯತೇ. ಈ ಆದೇಶಕ್ಕಾಗಿ ನಾವು ಕಾಯುತ್ತಿದ್ದೆವು. ಸುಪ್ರೀಂ ಕೋರ್ಟ್ ಮತ್ತು ಎಲ್ಲಾ ಮಾಧ್ಯಮಗಳಿಗೆ ನಾವು ಧನ್ಯವಾದ ಹೇಳುತ್ತೇವೆ” ಎಂದಿದ್ದಾರೆ.
“ಸುಪ್ರೀಂ ಕೋರ್ಟ್ ಈ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಿ ತೀರ್ಪು ನೀಡಿದೆ. ಇದು ನ್ಯಾಯದ ಮೂಲ. ಈ ತೀರ್ಪು ಅನ್ಯಾಯವನ್ನು ದೃಢತೆಯಿಂದ ಎದುರಿಸಿದರೆ ನ್ಯಾಯ ಸಿಗುತ್ತದೆ ಎಂಬ ಸಂದೇಶವನ್ನು ದೇಶದ ಹೆಣ್ಣುಮಕ್ಕಳಿಗೆ ರವಾನಿಸುತ್ತದೆ” ಎಂದು ಹೇಳಿದರು.





