ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಮಾಡಿ, ಲಸಿಕೆ ನೀಡಿ ಬಳಿಕ ಬಿಡುಗಡೆ ಮಾಡುವಂತೆ ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಆದೇಶವನ್ನು ಪಾಲಿಸಲಾಗಿದೆ ಎಂದು ದೃಢೀಕರಿಸಲು ಅಫಿಡವಿಟ್ಗಳನ್ನು ಸಲ್ಲಿಸದ ರಾಜ್ಯ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.
ಇನ್ನು ಬೀದಿ ನಾಯಿಗಳಿಗೆ ಸಂಬಂಧಿಸಿದ ಈ ಆದೇಶದ ಬಳಿಕವೂ ಹಲವು ಬೀದಿ ನಾಯಿಗಳಿಂದ ದಾಳಿ ನಡೆದ ಪ್ರಕರಣಗಳು ವರದಿಯಾಗಿರುವುದನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ತ್ರಿಸದಸ್ಯ ಪೀಠ ಉಲ್ಲೇಖಿಸಿದೆ.
ಇದನ್ನು ಓದಿದ್ದೀರಾ? ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್
ಕಳೆದ ತಿಂಗಳು, ಮಹಾರಾಷ್ಟ್ರದ ಪುಣೆಯಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಅದಕ್ಕೂ ಮುನ್ನ ಮತ್ತೊಂದು ಯುವತಿಯ ಮೇಲೆ ದಾಳಿ ನಡೆದಿದೆ. ಕಳೆದ ವಾರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುತ್ತಿದ್ದ ವ್ಯಕ್ತಿಯ ಮೇಲೆಯೇ ಬೀದಿ ನಾಯಿ ದಾಳಿ ನಡೆಸಿದೆ. ಉತ್ತರ ಪ್ರದೇಶದ ಲಕ್ನೋ ಮತ್ತು ತೆಲಂಗಾಣದ ವಾರಂಗಲ್ನಲ್ಲೂ ಬೀದಿ ನಾಯಿ ದಾಳಿ ನಡೆದಿದೆ. ಈ ಘಟನೆಗಳು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.
“ಈ ಪ್ರಕರಣಗಳ ಬಗ್ಗೆ ಇನ್ನೂ ರಾಜ್ಯ ಸರ್ಕಾರಗಳಿಂದ ಯಾವುದೇ ಉತ್ತರ ಬಂದಿಲ್ಲ. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಎರಡು ತಿಂಗಳುಗಳು ಕಳೆದಿವೆ. ಆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳಿಂದ ಸ್ಪಷ್ಟನೆಯನ್ನು ಕೋರಿದೆ.
“ನೀವು ಪತ್ರಿಕೆಗಳನ್ನು ಓದುವುದಿಲ್ಲವೇ? ಆಗಸ್ಟ್ 22ರಂದು ಹೊರಡಿಸಲಾದ ಆದೇಶವು ವ್ಯಾಪಕವಾಗಿ ವರದಿಯಾಗಿದೆ. ಎಲ್ಲಾ ರಾಜ್ಯಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಿರಬೇಕು. ಯಾಕೆ ವಿಳಂಬವಾಗಿದೆ ಎಂದು ವಿವರಿಸಬೇಕು” ಎಂದು ಸೂಚಿಸಿದೆ.
ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮಾತ್ರ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿವೆ. ಆದರೆ ದೆಹಲಿ ಸರ್ಕಾರ ಅಫಿಡವಿಟ್ ಸಲ್ಲಿಸಿಲ್ಲ. “ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಪ್ರತಿಕ್ರಿಯೆ ಸಲ್ಲಿಸಿದೆ. ಆದರೆ ದೆಹಲಿ ಸರ್ಕಾರವೇಕೆ ಉತ್ತರಿಸಿಲ್ಲ” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಇದನ್ನು ಓದಿದ್ದೀರಾ? ಗದಗ | ಬೀದಿನಾಯಿ, ಹಂದಿ ಹಾವಳಿ; ನಿಯಂತ್ರಣಕ್ಕೆ ಕರವೇ ಸ್ವಾಭಿಮಾನಿ ಸೇನೆ ಒತ್ತಾಯ
ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು ಎಂದು ಆಗಸ್ಟ್ 22ರಂದು ಆದೇಶಿಸಿದೆ.
ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಮುಕ್ತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಈ ಆದೇಶಕ್ಕೆ ಪ್ರಾಣಿ ಪ್ರಿಯರು, ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್ ಜಂತುಹುಳು ನಿವಾರಣೆ ಮತ್ತು ಲಸಿಕೆ ಹಾಕಿದ ನಂತರ ನಾಯಿ ಆಶ್ರಯ ತಾಣಗಳಿಂದ ನಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ. ಆದರೆ ರೇಬೀಸ್ ಸೋಂಕಿತ, ಆಕ್ರಮಣಕಾರಿ ನಾಯಿಗಳನ್ನು ಆಶ್ರಯ ತಾಣಗಳಿಂದ ಸಾರ್ವಜನಿಕ ಸ್ಥಳಗಳಿಗೆ ಬಿಡುವಂತಿಲ್ಲ ಎಂದು ತಿಳಿಸಿದೆ.





