ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.
ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಇದನ್ನು ಓದಿದ್ದೀರಾ? ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಈ ಹಿಂದೆ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪುರಾವೆ ಇಲ್ಲ ಎಂದು ಹೇಳಿ ಮರು ತನಿಖೆಗೆ ಅದೇಶಿಸಲು ನಿರಾಕರಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ಗೆ ವೈದ್ಯಕೀಯ ಪುರಾವೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು.
ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆಯೇ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕೊಲೆ, ನಿಗೂಢ ಸಾವು, ನಾಪತ್ತೆ ಪ್ರಕರಣಗಳು ಮುನ್ನೆಲೆಗೆ ಬಂದಿತ್ತು.
ಸೌಜನ್ಯ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನಡುವೆ ಪ್ರಕರಣದ ಸಾಕ್ಷಿಯಾಗಿದ್ದ ರವಿ ಪೂಜಾರಿ ಎಂಬುವವರು ನಿಗೂಢವಾಗಿ ಸಾವನ್ನಪ್ಪಿದ್ದರು. ಸೌಜನ್ಯ ಅತ್ಯಾಚಾರ ಕೊಲೆ ನಡೆದ ಎರಡು ದಿನದಲ್ಲೇ ಸಂತೋಷ್ ರಾವ್ ಎಂಬಾತನ ಬಂಧನ ಮಾಡಲಾಗಿತ್ತು. ಸುಮಾರು 11 ವರ್ಷಗಳ ಕಾಲ ಸಂತೋಷ್ ಜೈಲಿನಲ್ಲಿದ್ದರು.
ಆದರೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ ಸಂತೋಷ್ ಅವರು 2023ರಲ್ಲಿ ಸಂತೋಷ ರಾವ್ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಇವಿಷ್ಟು ನಡೆಯುತ್ತಿದ್ದಂತೆ ನಿಜಕ್ಕೂ ಈ ನೀಚ ಕೃತ್ಯವನ್ನು ಎಸಗಿದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಸೌಜನ್ಯ ತಾಯಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.





