ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ ಸಿಎಂ ಎಂ.ಕೆ ಸ್ಟ್ಯಾಲಿನ್ ನೇತೃತ್ವದ ಆಡಳಿತರೂಢ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (AMMK) ಪಕ್ಷದ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಹೇಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿಯ ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳ ವರದಿಗಾರರೊಂದಿಗೆ ಮಾತನಾಡಿದ ದಿನಕರನ್, ಡಿಎಂಕೆ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸುವುದಕ್ಕೆ ಕಾರ್ಯತಂತ್ರ ಹೆಣೆಯುವುದಕ್ಕೆ ದೆಹಲಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈತ್ರಿಕೂಟದ ಪಕ್ಷಗಳು ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಮತ್ತು ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವುದಕ್ಕೆ ಯಾವೆಲ್ಲಾ ಕಾರ್ಯತಂತ್ರ ಮಾಡಬೇಕು ಎಂಬ ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು. ಸಭೆಯಲ್ಲಿ ಸೀಟು ಹಂಚಿಕೆಯ ಚರ್ಚೆಯ ಬಗ್ಗೆ ಯಾವುದೆ ಮಾತುಕತೆ ನಡೆಸಿಲ್ಲ ಎಂದು ಅವರು ತಿಳಿಸಿದರು.
ತಮಿಳುನಾಡಿನ ಮತದಾರರು ಡಿಎಂಕೆ ಸರ್ಕಾರದ ದುರಾಡಳಿತಕ್ಕೆ ಬೇಸತ್ತಿದ್ದಾರೆ. ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದಕ್ಕೆ ತಯಾರಾಗಿದ್ದಾರೆ ಎಂದು ಹೇಳಿದ್ದಲ್ಲದೆ, ಡಿಎಂಕೆ ಸರ್ಕಾರದ ಮೇಲೆ ಆಡಳಿತ ವಿರೋಧಿ ಅಲೆ ಇದೆ ಎಂದಿದ್ದಾರೆ.
ನಮ್ಮ ಮೈತ್ರಿಯನ್ನು ತಮಿಳುನಾಡಿನಲ್ಲಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುನ್ನಡೆಸುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ನೇತೃತ್ವ ವಹಿಸಿದೆ. ರಾಜ್ಯದಲ್ಲಿ ಡಿಎಂಕೆ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿದ್ದಾರೆ. ಮತದಾರರು ಈ ಬಾರಿ ಎನ್ಡಿಎ ಮೈತ್ರಿಕೂಟವನ್ನು ಅಧಿಕಾರಕ್ಕೆ ಏರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಚುನಾವಣೆ | ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೇರುವುದು ನಿಶ್ಚಿತ : ಟಿಟಿವಿ ದಿನಕರನ್ ವಿಶ್ವಾಸ
Date:
ಪೋಸ್ಟ್ ಹಂಚಿಕೊಳ್ಳಿ:




