ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಐಎಡಿಎಂಕೆ (AIADMK), ಬಿಜೆಪಿ ಮತ್ತು ಇತರ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಂದಿನ ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ, ಅಧಿಕೃತವಾಗಿ ಯಾವಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎನ್ನುವುದರ ಬಗ್ಗೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ(ಮಾ. 19) ಭೇಟಿ ಮಾಡದ್ದ ಪಳನಿಸ್ವಾಮಿ, ತಮಿಳುನಾಡಿನ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದಾರೆ. ಶಾ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಳನಿಸ್ವಾಮಿ, “ಮೈತ್ರಿಕೂಟದ ಮಾತುಕತೆಗಳು ಅತ್ಯಂತ ಸುಗಮವಾಗಿ ಸಾಗುತ್ತಿವೆ. ಡಿಎಂಕೆ ಮೈತ್ರಿಕೂಟದಲ್ಲಿ ಇರುವಂತಹ ಗೊಂದಲಗಳು ಇಲ್ಲಿಲ್ಲ. ಗೆಲ್ಲುವ ಸಾಧ್ಯತೆ ಹೆಚ್ಚಿರುವ ಕ್ಷೇತ್ರಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡುವುದು ನಮ್ಮ ಉದ್ದೇಶ” ಎಂದು ತಿಳಿಸಿದ್ದಾರೆ.
ವಿಜಯ್ ಜೊತೆ ಮೈತ್ರಿ ಇಲ್ಲ :
ದಳಪತಿ ವಿಜಯ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೂಡ ತಿಳಿಸಿರುವ ಅವರು, ʼನಾವು ವಿಜಯ್ ಜೊತೆ ಮಾತುಕತೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಊಹಾಪೋಹದ ಸುದ್ದಿಗಳುʼ ಎಂದು ಸ್ಪಷ್ಟಪಡಿಸಿದ್ದಾರೆ.





