ಸ್ಥಳೀಯ ಜಾತ್ರೆಗಾಗಿ ಚಂದಾ ಸಂಗ್ರಹದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಘಟನೆಯು ತ್ರಿಪುರಾದ ಉನಕೋಟಿ ಜಿಲ್ಲೆಯ ಸೈದರ್ಪರ್ ಗ್ರಾಮದಲ್ಲಿ ನಡೆದಿದೆ. ಸುಮಾರು 10 ಮಂದಿ ಗಾಯಗೊಂಡಿದ್ದು, ಹಲವಾರು ಮನೆಗಳು ಸುಟ್ಟುಹೋಗಿವೆ ಎಂದು ವರದಿಯಾಗಿದೆ.
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸೈದರ್ಪರ್ ಗ್ರಾಮದಲ್ಲಿ ಶನಿವಾರ ರಾತ್ರಿ ನಿಷೇಧಾಜ್ಞೆ ಹೊರಡಿಸಿ ತ್ರಿಪುರ ಸರ್ಕಾರ ಆದೇಶಿಸಿದೆ. ಅಲ್ಲದೆ, ಘರ್ಷಣೆ ನಡೆದ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ.
ಚಂದಾ ವಸೂಲಿ ವಿವಾದವು ಕೋಮು ತಿರುವು ಪಡೆದುಕೊಂಡ ನಂತರ ಘರ್ಷಣೆಗಳು ಭುಗಿಲೆದ್ದಿವೆ. ಇದು ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಘಟನೆಗಳಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘರ್ಷಣೆಯಲ್ಲಿ ಹಲವಾರು ಆಸ್ತಿಗಳಿಗೆ ಹಾನಿಯಾಗಿದೆ. ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕುಮಾರ್ಘಾಟ್ ಉಪವಿಭಾಗದಾದ್ಯಂತ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಎಂಟು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಫಾತಿಕ್ರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಸೈದರ್ಪರ್ ಗ್ರಾಮದಲ್ಲಿ ಜನರ ಗುಂಪೊಂದು ಮರ ತುಂಬಿದ ವಾಹನವನ್ನು ತಡೆದು ಜಾತ್ರೆಗೆ ಚಂದಾ ನೀಡುವಂತೆ ಒತ್ತಾಯಿಸಿದ್ದು ಘರ್ಷಣೆಗೆ ಮುಲಕಾರಣವೆಂದು ಪೊಲೀಸ್ ಮೂಲಗಳು ತಿಳಿಸಿವೆ.




