2017ರ ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಂತ್ರಸ್ತೆ, ತನ್ನ ಕುಟುಂಬ ಮತ್ತು ಸಾಮಾಜಿಕ ಕಾರ್ಯಕರ್ತರೊಂದಿಗೆ ದೆಹಲಿಯ ಜಂತರ್ ಮಂತರ್ನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಕುಟುಂಬಕ್ಕೆ ಭದ್ರತೆ ಹೆಚ್ಚಿಸಬೇಕು ಎಂದು ಸಂತ್ರಸ್ತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂತ್ರಸ್ತೆ, “ನಮಗೆ ಭದ್ರತೆ ಒದಗಿಸುವಂತೆ ನಾನು ಮುಖ್ಯಮಂತ್ರಿಯನ್ನು(ಯೋಗಿ ಆದಿತ್ಯನಾಥ್) ವಿನಂತಿಸುತ್ತಿದ್ದೇನೆ. ಈ ಜನರು ಶಕ್ತಿಶಾಲಿಗಳು. ದಯವಿಟ್ಟು ನಿಮ್ಮ ಮಗಳನ್ನು ಉಳಿಸಿ. ನನ್ನ ಗಂಡನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ನಾವು ನಿರುದ್ಯೋಗಿಗಳು, ನಾವು ಎಲ್ಲಿಗೆ ಹೋಗುವುದು” ಎಂದು ಸಂತ್ರಸ್ತೆ ಪ್ರಶ್ನಿಸಿದ್ದಾರೆ.
ಇದನ್ನು ಓದಿದ್ದೀರಾ? ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?
ಪ್ರತಿಭಟನಾಕಾರರು ಅಪರಾಧಿಯ ಬಗ್ಗೆ ಅನಗತ್ಯವಾಗಿ ದಯೆ ತೋರಲಾಗುತ್ತಿದೆ ಎಂದು ದೂರಿದ್ದು ಈವರೆಗೆ ನ್ಯಾಯ ಸಿಕ್ಕಿಲ್ಲ ಎಂದು ವಾದಿಸಿದರು. “ಸುಪ್ರೀಂ ಕೋರ್ಟ್ ಅನ್ನು ನಂಬುತ್ತೇವೆ. ಈ ಪ್ರಕರಣದಲ್ಲಿ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ” ಎಂದು ಸಂತ್ರಸ್ತೆಯ ತಾಯಿ ಹೇಳಿದರು.
“ನಮ್ಮನ್ನು ಥಳಿಸಲಾಯಿತು, ನಮ್ಮ ಸಂಬಂಧಿಕರನ್ನು ಥಳಿಸಲಾಯಿತು, ನಮ್ಮ ಸಂಬಂಧಿಕರ ವಿರುದ್ಧ ನಕಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಹಾಗಿರುವಾಗ ಅಪರಾಧಿಯನ್ನು ಬಿಡುಗಡೆ ಮಾಡದಂತೆ ನಾನು ಸರ್ಕಾರವನ್ನು ವಿನಂತಿಸುತ್ತೇನೆ” ಸಂತ್ರಸ್ತೆಯ ತಾಯಿ ಹೇಳಿದ್ದಾರೆ.
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು, ಕುಲದೀಪ್ ಶಿಕ್ಷೆಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಆದರೂ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ಜೈಲಿನಲ್ಲೇ ಇರುತ್ತಾನೆ.
ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ತ್ರಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಇನ್ನು ಭಾನುವಾರ ಪ್ರತಿಭಟನೆಯಲ್ಲಿ ಸಂತ್ರಸ್ತೆಗೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ (AIPWA) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಪ್ರತಿಭಟನಾಕಾರರೂ ಭಾಗಿಯಾಗಿದ್ದರು. ಈ ತೀರ್ಪಿನಿಂದಾಗಿ ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯಾಗುತ್ತದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಿಸಿದರು.
ಇನ್ನು ಈ ವೇಳೆ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್ಗೆ ಬೆಂಬಲ ನೀಡುವ ಫಲಕದೊಂದಿಗೆ ಮಹಿಳೆಯೊಬ್ಬಳು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದು, ಆಕೆಯನ್ನು ಸ್ಥಳದಿಂದ ದೂರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ. ಈ ಮೂಲಕ ಪ್ರತಿಭಟನೆಯಲ್ಲಿ ಗಲಾಟೆ ಉಂಟು ಮಾಡುವ ಪ್ರಯತ್ನ ನಡೆದಿದೆ ಎಂದು ವರದಿಯಾಗಿದೆ.





