ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮತಗಳ ಕಳ್ಳತನ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸೋಮವಾರ(ಆ.11) ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಿದ್ದಾರೆ. ಈ ಪಾದಯಾತ್ರೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ‘ಇಂಡಿಯಾ’ ಮೈತ್ರಿಕೂಟದ ಸಂಸದರಿಗಾಗಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗೆ 11.30ಕ್ಕೆ ಸಂಸತ್ತಿನಿಂದ ಆರಂಭವಾಗಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸುಮಾರು 300 ಸಂಸದರು ಭಾಗವಹಿಸುವ ನಿರೀಕ್ಷೆಯಿದೆ.
ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದು, ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳು ಕಳ್ಳತನವಾಗಿವೆ ಎಂದು ದಾಖಲೆಗಳೊಂದಿಗೆ ಬಹಿರಂಗಪಡಿಸಿದ್ದಾರೆ. ಈ ಆರೋಪದ ಬೆನ್ನಲ್ಲೇ, ವಿರೋಧ ಪಕ್ಷಗಳು ಪ್ರತಿಭಟನೆಗೆ ತೀರ್ಮಾನಿಸಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್ಎಸ್ಎಸ್ ಕಗ್ಗಂಟು?
2024ರ ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ‘ಇಂಡಿಯಾ’ ಮೈತ್ರಿಕೂಟದ ಮೊದಲ ಪ್ರತಿಭಟನೆಗೆ ಎಎಪಿ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಆಗಸ್ಟ್ 8ರಂದು ನಡೆಯಬೇಕಿದ್ದ ಈ ಪ್ರತಿಭಟನೆಯನ್ನು ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಚುನಾವಣೆಯಲ್ಲಿ ಕಂಡುಬಂದಿರುವ ಮತ ಕಳ್ಳತನ ಮತ್ತು ಅಕ್ರಮಗಳ ಬಗ್ಗೆ ರಾಷ್ಟ್ರವ್ಯಾಪಿ ಗಮನ ಸೆಳೆಯಲು ಈ ಪಾದಯಾತ್ರೆಯನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮೈತ್ರಿಕೂಟದ ನಾಯಕರು ಚರ್ಚೆ ನಡೆಸಿ, ಭವಿಷ್ಯದ ಹೋರಾಟದ ರೂಪುರೇಷೆಯನ್ನು ರೂಪಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.





