ಹರಿಯಾಣ ಜಾನಪದ ಗಾಯಕ ಉತ್ತರ್ ಕುಮಾರ್ ಎರಡು ತಿಂಗಳ ಹಿಂದೆ ಅತ್ಯಾಚಾರದ ಆರೋಪ ಹೊರಿಸಿದ್ದ ನೋಯ್ಡಾದ ಮಹಿಳೆಯೊಬ್ಬರು, ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿ ನಿವಾಸದ ಹೊರಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಮಹಿಳೆಯನ್ನು ತಡೆದಿದ್ದಾರೆ. ಗೌತಮಪಲ್ಲಿ ಪೊಲೀಸರಿಗೆ ಆಕೆಯನ್ನು ಹಸ್ತಾಂತರಿಸಲಾಗಿದ್ದು, ಘಟನೆಯ ಬಗ್ಗೆ ಅತ್ಯಾಚಾರ ಪ್ರಕರಣ ದಾಖಲಾಗಿರುವ ಗಾಜಿಯಾಬಾದ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ
ಜೂನ್ 24ರಂದು ಗಾಜಿಯಾಬಾದ್ನ ಶಾಲಿಮಾರ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಉತ್ತರ್ ಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಪೊಲೀಸರು ದೂರು ದಾಖಲಿಸಿಲ್ಲ, ಹೈಕೋರ್ಟ್ ನಿರ್ದೇಶನದ ಬಳಿಕ ಸುಮಾರು 25 ದಿನಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಆದರೂ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.
ಆರೋಪಿ ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಪದೇ ಪದೇ ತಿಳಿಸಿದ್ದೇನೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ದೂರಿದ್ದಾರೆ. ಹಾಗೆಯೇ ವಿಳಂಬದಿಂದ ಬೇಸತ್ತ ಮಹಿಳೆ ಲಕ್ನೋಗೆ ಪ್ರಯಾಣಿಸಿ ಪ್ರತಿಭಟನೆಯ ಒಂದು ರೂಪವಾಗಿ ಆತ್ಮಾಹುತಿಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಘಟನೆಗೂ ಮುನ್ನ, ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದರೆ ಮುಖ್ಯಮಂತ್ರಿ ನಿವಾಸದ ಹೊರಗೆ ಕಠಿಣ ಹೆಜ್ಜೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.
ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಹೇಳಿಕೆಯನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರೆ ಅತ್ಯಾಚಾರ ಪ್ರಕರಣದ ತನಿಖೆ ಅಥವಾ ಆರೋಪಿ ವಿರುದ್ಧದ ಕ್ರಮದ ಬಗ್ಗೆ ರಾಜ್ಯ ಪೊಲೀಸರು ಇನ್ನೂ ಅಧಿಕೃತವಾಗಿ ಹೇಳಿಕೆಯನ್ನು ನೀಡಿಲ್ಲ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.





