“ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು” ಎಂದು ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಂಸತ್ತಿನಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಆದೇಶಿಸುವ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿ ವಿಚಾರಣೆಯನ್ನು ಸೋಮವಾರ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ನಡೆಸಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್ ಹೇಳಿಕೆ ಅಪಾಯಕಾರಿ
“ಭಾರತದ ಸಂವಿಧಾನದ ಪೀಠಿಕೆ ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಎಲ್ಲಾ ನಾಗರಿಕರು ಅರ್ಹರು ಎಂದು ಹೇಳುತ್ತದೆ. ಈ ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು? ಅದು ಮಹಿಳೆಯರು. ಬಹುತೇಕ ಶೇಕಡ 48ರಷ್ಟು. ಇದು ಮಹಿಳೆಯ ರಾಜಕೀಯ ಸಮಾನತೆಯ ವಿಚಾರ” ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಹೇಳಿದರು.
ಅದಾದ ಬಳಿಕ ನ್ಯಾಯಾಲಯವು ಹೊಸ ಸೀಮಾ ನಿರ್ಣಯ ಪ್ರಕ್ರಿಯೆ ನಡೆಸುವವರೆಗೆ ಕಾಯದೆ ಮಹಿಳಾ ಮೀಸಲಾತಿ ಮಸೂದೆ 2024 ಅನ್ನು ಜಾರಿಗೆ ತರುವಂತೆ ಕೋರಿ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್ ನೀಡಿದ. ಠಾಕೂರ್ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ವಾದ ಮಂಡಿಸಿದ್ದಾರೆ.
“ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ನಮ್ಮ ದೇಶ ಸ್ವಾತಂತ್ರ್ಯ ಪಡೆದ 75 ವರ್ಷಗಳ ನಂತರ, ನಾವು (ಮಹಿಳೆಯರು) ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಬೇಕಾಗಿರುವುದು ದುರದೃಷ್ಟಕರ. ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಾತ್ರ ಮೀಸಲಿಡಬೇಕಾಗಿದೆ. ಆದರೆ ಇಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವಾಗ ನ್ಯಾಯಾಲಯಕ್ಕೆ ಕೆಲವು ಮಿತಿಗಳಿವೆ” ಎಂದು ಗಮನಿಸಿದ ಪೀಠವು ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.
ಮಹಿಳಾ ಮೀಸಲಾತಿ ಮಸೂದೆಯನ್ನು 2023ರ ಸೆಪ್ಟೆಂಬರ್ 20ರಂದು ಲೋಕಸಭೆ ಮತ್ತು ಆ ವರ್ಷ ಸೆಪ್ಟೆಂಬರ್ 21ರಂದು ರಾಜ್ಯಸಭೆ ಅಂಗೀಕರಿಸಿದೆ. 2023ರ ಸೆಪ್ಟೆಂಬರ್ 28ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿದೆ.





