ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಹಾಗೆಯೇ ಈ ತೀರ್ಪಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, “ಈ ಪ್ರಕರಣವು ರಾಜಕೀಯ ದ್ವೇಷದಿಂದ ನಡೆದಿದೆ ಎಂಬುದು ಈಗ ಖಚಿತವಾಗಿದೆ. ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುವುದು ಮತ್ತು ವಿರೋಧ ಪಕ್ಷಗಳನ್ನು ಗುರಿಯಾಗಿಸುವುದೇ ಈ ಆರೋಪದ ಉದ್ದೇಶವಾಗಿತ್ತು. ನಾವು ತೀರ್ಪು ಸ್ವಾಗತಿಸುತ್ತೇವೆ. ಸತ್ಯಕ್ಕೆ ಜಯವಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ಕೋರ್ಟ್ ನಕಾರ
ಇನ್ನು “ಈ ತೀರ್ಪಿನ ನಂತರ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ರಾಜೀನಾಮೆ ನೀಡಬೇಕು. ಯಾಕೆಂದರೆ ಈ ತೀರ್ಪು ಅವರ ಮುಖಕ್ಕೆ ಹೊಡೆದಂತಿದೆ. ಈ ರೀತಿ ಕಿರುಕುಳ ನೀಡಿದ ಕಾರಣಕ್ಕೆ ಅವರು ರಾಜೀನಾಮೆ ನೀಡಬೇಕು” ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರುಗಳಾದ ಕೆ ಸಿ ವೇಣುಗೋಪಾಲ್, ಅಭಿಷೇಕ್ ಸಿಂಘ್ವಿ, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದು, “ಈ ರೀತಿ ಕಿರುಕುಳ ನೀಡುವ ಕೆಲಸ ಮಾಡಿದರೆ ಅದನ್ನು ಜನರು ಸಹಿಸುವುದಿಲ್ಲ ಎಂಬುದನ್ನು ಅವರು ತಿಳಿದಿರಬೇಕು. ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, “ನಾವು ಸೇಡಿನ ರಾಜಕೀಯವನ್ನು ಬಹಿರಂಗಪಡಿಸುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು ದೇಶದಾದ್ಯಂತ ತಮ್ಮ ಶಕ್ತಿಯನ್ನು ಪ್ರದರ್ಶಿಸಲಿದ್ದಾರೆ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ರಾಜಕೀಯ ದ್ವೇಷದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಎಫ್ಐಆರ್: ಮಲ್ಲಿಕಾರ್ಜುನ ಖರ್ಗೆ
ಏನಿದು ನ್ಯಾಷನರ್ ಹೆರಾಲ್ಡ್ ಪ್ರಕರಣ?
2012ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಂಚನೆ ಮತ್ತು ಹಣಕಾಸು ದುರುಪಯೋಗದ ಆರೋಪ ಮಾಡಿ ದೂರು ನೀಡಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ಎಂಬ ಸಂಸ್ಥೆ ಕಾಂಗ್ರೆಸ್ ಪಕ್ಷಕ್ಕೆ ನೀಡಬೇಕಿದ್ದ 90.25 ಕೋಟಿ ರೂ. ಸಾಲವನ್ನು ‘ಯಂಗ್ ಇಂಡಿಯನ್’ ಎಂಬ ಸಂಸ್ಥೆಯ ಮೂಲಕ ಕೇವಲ 50 ಲಕ್ಷ ರೂ.ಗಳಿಗೆ ಖರೀದಿಸಿ, ಆ ಮೂಲಕ ಎಜೆಎಲ್ ಸಂಸ್ಥೆಯ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಹಸ್ತಾಂತರಿಸಿಕೊಳ್ಳಲಾಗಿದೆ ಎಂಬುದು ಆರೋಪವಾಗಿದೆ. ಈ ಸಂಸ್ಥೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಶೇ. 76ರಷ್ಟು ಪಾಲನ್ನು ಹೊಂದಿದ್ದಾರೆ.
ಆದರೆ ಇತ್ತೀಚೆಗೆ ನ್ಯಾಯಾಲಯವುದ ಇಡಿ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿದೆ. ಈ ಪ್ರಕರಣವು ಸುಬ್ರಮಣಿಯನ್ ಸ್ವಾಮಿ ಅವರ ಖಾಸಗಿ ದೂರಿನ ಆಧಾರದಲ್ಲಿ ಆರಂಭವಾಗಿರುವುದರಿಂದ ಇಡಿ ದೂರು ಕಾನೂನುಬದ್ಧವಾಗಿ ಉಳಿಯುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಸಂದರ್ಭದಲ್ಲೇ ಇಡಿ ತನ್ನ ತನಿಖೆಯನ್ನು ಮುಂದುವರಿಸಲು ಸ್ವತಂತ್ರವಾಗಿದೆ ಎಂದೂ ಕೋರ್ಟ್ ತಿಳಿಸಿದೆ.





