- ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ
- ‘ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು’ ಎಂದು ಬೆದರಿಕೆ
ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದ್ದು, ಕಿತ್ತೂರು ಪೊಲೀಸರಿಗೆ ಸ್ವಾಮೀಜಿ ದೂರು ನೀಡಿದ್ದಾರೆ. ಆಗಸ್ಟ್ 8ರಂದೇ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆದರಿಕೆ ಪತ್ರದಲ್ಲಿ, “2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬೆದರಿಕೆ ಪತ್ರ ಮಠಕ್ಕೆ ಬಂದಿದೆ.
2020ರಲ್ಲಿಯೂ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ.

ತಮ್ಮ ನಿಷ್ಠುರ ಮಾತುಗಳಿಂದಲೇ ರಾಜ್ಯದಲ್ಲಿ ಬಸವ ತತ್ವದ ಪ್ರಚಾರಕರಾಗಿ ಖ್ಯಾತಿ ಗಳಿಸಿರುವ ನಿಜಗುಣಾನಂದ ಸ್ವಾಮೀಜಿ, ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರು ತಮ್ಮ ಪ್ರವಚನದಲ್ಲಿ ನೀಡುತ್ತಲೇ ಬಂದಿದ್ದಾರೆ.
ಪತ್ರದ ಬಗ್ಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, “ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ‘ಪ್ರೇಮಪತ್ರ’ಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ತಿಳಿಸಿದ್ದಾರೆ.
ಜೀವ ಬೆದರಿಕೆ ಪತ್ರದ ಕುರಿತು ಬೈಲೂರಲ್ಲಿ ಮಾತನಾಡಿರುವ ಮಾಜಿ ಸಿಎಂ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, ಕಲ್ಯಾಣ ಕ್ರಾಂತಿ ಸಮಯದಲ್ಲಿ ಕೂಡ ಬಸವಣ್ಣರಿಗೂ ಹೀಗೆ ಕಿರುಕುಳ ನೀಡಲಾಗಿತ್ತು. ಮೂಢನಂಬಿಕೆ, ವೈಚಾರಿಕತೆ ಬಗ್ಗೆ ಮಾತನಾಡುವ ನಿಜಗುಣಾನಂದ ಸ್ವಾಮೀಜಿಗೂ ಬೆದರಿಕೆ ಬರುತ್ತಿವೆ. ನಾನು ಕೂಡ ಮುಖ್ಯಮಂತ್ರಿ, ಗೃಹಸಚಿವರ ಜೊತೆಗೆ ಮಾತನಾಡುತ್ತೇನೆ. ಆರೋಪಿಗಳ ಬಂಧನದ ಜೊತೆಗೆ ಸ್ವಾಮೀಜಿಯವರಿಗೆ ಭದ್ರತೆ ಒದಗಿಸುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.





