ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮತದಾರ ಅಧಿಕಾರ ಯಾತ್ರೆ’ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ವಿರುದ್ಧ ಶುಕ್ರವಾರ ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.
ಉಭಯ ಪಕ್ಷಗಳ ಕಾರ್ಯಕರ್ತರು ಬಾವುಟದ ಕೋಲುಗಳಿಂದ ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಬಿಜೆಪಿ ನಾಯಕರಲ್ಲಿ ಒಬ್ಬರಾದ ನಿತಿನ್ ನಬಿನ್, ಕಾಂಗ್ರೆಸ್ಗೆ ತಕ್ಕ ಉತ್ತರ ನೀಡುವುದಾಗಿ ಹೇಳಿದ್ದಾರೆ. “ತಾಯಿಯನ್ನು ಅವಮಾನಿಸಿದ್ದಕ್ಕಾಗಿ ಬಿಹಾರದ ಪ್ರತಿಯೊಬ್ಬ ಮಗ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡುತ್ತಾರೆ. ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಹೇಳಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ನರೇಂದ್ರ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದ ಕಾಲ್ತುಳಿತ: ಕಾಂಗ್ರೆಸ್ ಆಕ್ರೋಶ
ಇದಕ್ಕೆ ಪ್ರತಿಯಾಗಿ ಈ ಘಟನೆಯಲ್ಲಿ ಆಡಳಿತ ಪಕ್ಷವು ಭಾಗಿಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. “ತಕ್ಕ ಉತ್ತರ ನೀಡಲಾಗುವುದು. ಇದು ಸರ್ಕಾರದ ಭಾಗಿಯಾಗುವಿಕೆಯೊಂದಿಗೆ ನಡೆಯುತ್ತಿದೆ. ನಿತೀಶ್ ಕುಮಾರ್ ತಪ್ಪು ಮಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ಕಾರ್ಯಕರ್ತ ಡಾ. ಅಶುತೋಷ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಮತದಾರರ ಕಳ್ಳತನದ ವಿರುದ್ಧವಾಗಿ ನಡೆಯುತ್ತಿರುವ ನಿರಂತರ ಕಾರ್ಯಕ್ರಮಗಳ ಸಂದರ್ಭದಲ್ಲಿ ವೇದಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಹಿಂದಿಯಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂಬ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬೆನ್ನಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಬಿಜೆಪಿ ಕಾಂಗ್ರೆಸ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣವೂ ದಾಖಲಾಗಿದೆ.
VIDEO | Bihar: Clashes break out between BJP and Congress workers in Patna. The BJP workers were protesting outside the Congress office against the alleged abuses hurled at PM Modi during Rahul Gandhi, Tejashwi Yadav-led 'Voter Adhikar Yatra'.#PatnaNews #BiharNews
— Press Trust of India (@PTI_News) August 29, 2025
(Full video… pic.twitter.com/Lem9b5A5Fj
ಇದಕ್ಕೂ ಮುನ್ನವೇ ಪ್ರಧಾನಿ ಮೋದಿ ಅವರನ್ನು ನಿಂದಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದರ್ಭಾಂಗಾ ಪೊಲೀಸರು ತಿಳಿಸಿದ್ದಾರೆ. ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಕ್ಸ್ನಲ್ಲಿ ದರ್ಭಾಂಗಾ ಪೊಲೀಸರು ಪೋಸ್ಟ್ ಮಾಡಿದ್ದಾರೆ.
ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಚಾರದಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಘಟನೆಯನ್ನು ಅಲ್ಲಗಳೆದಿದ್ದಾರೆ. ನಿಜವಾದ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಂತಹ ವಿಷಯಗಳನ್ನು ಹಬ್ಬುತ್ತಿದೆ ಎಂದು ದೂರಿದ್ದಾರೆ.





