ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನರ ಮೇಲೆ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(AIDYO) ಖಂಡಿಸಿದೆ. ಈ ಕೂಡಲೇ ಹೋರಾಟ ಸಮಿತಿಯ ಮುಖಂಡರನ್ನು ಹಾಗೂ ಉದ್ಯೋಗ ಆಕಾಂಕ್ಷಿಗಳನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ AIDYO, ಕೇಂದ್ರ ಮತ್ತು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ನೇಮಕಾತಿಯಲ್ಲಿ ಅಕ್ರಮ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಪಾರದರ್ಶಕ ನೇಮಕಾತಿ ಮಾಡಬೇಕು ಹಾಗೂ ಎಲ್ಲಾ ನೇಮಕಾತಿಯಲ್ಲಿ ಐದು ವರ್ಷ ವಯೋಮಿತಿಯನ್ನು ಹೆಚ್ಚಿಸಬೇಕು ಎಂಬ ಇನ್ನಿತರ ಹಲವು ನ್ಯಾಯಯುತ ಹಾಗೂ ಪ್ರಜತಾಂತ್ರಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಜನಸಾಮಾನ್ಯರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹೊರಟಿದ್ದರು. ಈ ಸಮಸ್ಯೆಗಳ ಪರಿಹಾರಕ್ಕಾಗಿ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿ ಯುವಜನರ ಮೇಲೆ ಲಾಠಿಚಾರ್ಜ್ ನಡೆಸಿ ಅವರನ್ನು ಬಂಧಿಸಿರುವುದು ಹೋರಾಟವನ್ನು ಧಮನ ಮಾಡುವ ಕ್ರಮ ಎಂದು ದೂರಿದೆ.
ಇದನ್ನು ಓದಿದ್ದೀರಾ? ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ
ಕಳೆದ ಹತ್ತು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಯ ತಳ್ಳುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ತಾನು ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಉದ್ಯೋಗ ಭರ್ತಿ ಮಾಡುವ ವಾಗ್ದಾನ ನೀಡಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದರೂ ಯಾವುದೇ ನೇಮಕಾತಿಗೆ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರವು ಸಹ ಕಾಲ ಕಾಲಕ್ಕೆ ನೇಮಕಾತಿ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಹಲವಾರು ವರ್ಷಗಳಿಂದ ಗ್ರಂಥಾಲಯಗಳಲ್ಲಿ ಕುಳಿತು ಓದಿ, ತರಬೇತಿಗಳನ್ನು ಪಡೆದು ಸಾವಿರಾರು ರೂಪಾಯಿಗಳ ಸಾಲಗಳನ್ನು ಮಾಡಿಕೊಂಡು ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಆದರೆ ವಿವಿಧ ರೀತಿಯ ನೆಪಗಳನ್ನು ಮುಂದೆ ಮಾಡಿ ನೇಮಕಾತಿಗಳ ಅಧಿಸೂಚನೆಯನ್ನು ಹೊರಡಿಸದೆ, ಉದ್ಯೋಗ ಆಕಾಂಕ್ಷಿಗಳಿಗೆ ನಿರಾಶೆಯನ್ನುಂಟುಮಾಡಿದೆ. ಸರ್ಕಾರಗಳ ಈ ನೀತಿಯ ವಿರುದ್ಧ ಉದ್ಯೋಗ ಆಕಾಂಕ್ಷಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಅವರ ಮೇಲೆ ಲಾಠಿ ಬೀಸಿ, ಬಂಧಿಸಿರುವ ಕ್ರಮವು ಅತ್ಯಂತ ಜನತಾಂತ್ರಿಕ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದೆ.
ಈ ಕೂಡಲೇ ಬಂಧಿಸಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮತ್ತು ಜನಸಾಮಾನ್ಯರ ವೇದಿಕೆಯ ಮುಖಂಡರನ್ನು ಹಾಗೂ ಉದ್ಯೋಗ ಅಕಾಂಕ್ಷಿಗಳನ್ನು ಕೂಡಲೇ ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.





