ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
2017ರ ಜನವರಿ 2ರಂದು ಅನಂತ್ ಕುಮಾರ್ ಹೆಗಡೆ ಅವರು ತಮ್ಮ ತಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಎಸ್ಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ, ಅನಂತ ಕುಮಾರ್ ಹೆಗಡೆ ಮತ್ತು ಅವರ ಸಹೋದರ ಈಶ್ವರ್ ಎಸಳೆ ಅವರು ಆಸ್ಪತ್ರೆಯ ವೈದ್ಯ ಡಾ. ಮಧುಕೇಶ್ವರ್ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ, ಆಸ್ಪತ್ರೆ ಸಿಬ್ಬಂದಿಗಳಾದ ಬಾಲಚಂದ್ರ ಭಟ್ಟ, ರಾಹುಲ್ ಮಾಶಲೇಕರ್ ಅವರ ಮೇಲೂ ಹಲ್ಲೆಗೈದ್ದರು.
ಡಾ. ಮಧುಕೇಶ್ವರ್ ಅವರು ಅನಂತ್ ಕುಮಾರ್ ಹೆಗಡೆ ಮತ್ತು ಈಶ್ವರ್ ವಿರುದ್ಧ ದೂರು ದಾಖಲಿಸಿದ್ದರು. ಜನವರಿ 3ರಂದು ಆಸ್ಪತ್ರೆಯ ಸಿಸಿಟಿವಿ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದ್ದ, ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರ ಹಾಗೂ ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ನಿಷೇಧ ಕಾಯ್ದೆ ಸೆಕ್ಷನ್ 4 ಮತ್ತು ಐಪಿಸಿ ಸೆಕ್ಷನ್ 506, 341, 34, 323 ಅಡಿ ಎಫ್ಐಆರ್ ದಾಖಲಿಸಿದ್ದರು.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡಸಿದ್ದ ಹೈಕೋರ್ಟ್, 2017ರ ಸೆಪ್ಟೆಂಬರ್ 20ರಂದು ಪ್ರಕರಣದ ತನಿಖೆಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿತ್ತು. ಬಳಿಕ, ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಲಾಗಿತ್ತು.
ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?
ಆದರೆ. ಇದೇ ವರ್ಷದ ಆಗಸ್ಟ್ ನಡೆದಿದ್ದ ವಿಚಾರಣೆ ವೇಳೆ, ಅನಂತ್ ಕುಮಾರ್ ಹೆಗಡೆ ಪರವಾಗಿ ನ್ಯಾಯಾಲಯಕ್ಕೆ ಯಾರೂ ಹಾಜರಾಗಿರಲಿಲ್ಲ. ಹೀಗಾಗಿ, ‘ವಿಚಾರಣೆಯ ಪ್ರಕ್ರಿಯೆಗಳಲ್ಲಿ ಶ್ರದ್ಧೆಯ ಕೊರತೆ ಇದೆ’ ಎಂದಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಪ್ರಚಾರಣೆಗೆ ಹಾಜರಾಗಲು ಕೊನೆಯ ಬಾರಿಯ ಅವಕಾಶ ನೀಡಿತ್ತು.
ಆದಾಗ್ಯೂ, ಈವರೆಗೆ ಅನಂತ್ ಕುಮಾರ್ ಹೆಗಡೆ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್, “ಯಾರೂ ಹಾಜರಾಗಿಲ್ಲ ಎಂದ ಮೇಲೆ ನಾನು ಅರ್ಜಿಯನ್ನು ವಜಾಗೊಳಿಸುತ್ತೇನೆ” ಎಂದು ಹೇಳಿದ್ದಾರೆ. ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದೀಗ, ಪ್ರಕರಣವು ಪೊಲೀಸ್ ತನಿಖೆಗೆ ಮುಕ್ತವಾಗಿದೆ.




