ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಶಕ ಬೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಅವರನ್ನು ಇಂದೇ ಜಯದೇವ ಆಸ್ಪತ್ರೆಯಲ್ಲಿ ಹೃದಯ ಪರೀಕ್ಷೆಗೆ ಒಳಪಡಿಸಬೇಕು. ಶನಿವಾರ, ಪರೀಕ್ಷಾ ವರದಿ ಮತ್ತು ಆರೋಪಿ ಬಸವರಾಜ್ ಅವರನ್ನು ಹಾಜರುಪಡಿಸಬೇಕೆಂದು ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ.
ಗುರುವಾರ ರಾತ್ರಿ ಬೈರತಿ ಬಸವರಾಜ್ ಅವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದರು. ಈ ವೇಳೆ, ಬೈರತಿ ಪರ ವಕೀಲರು, ಆರೋಪಿ ಬಸವರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಇದೆ. ಅವರಿಗೆ ಚಿಕಿತ್ಸೆಗೆ ಅಗತ್ಯವಿದ್ದು, ಜಾಮೀನು ನೀಡಬೇಕೆಂದು ವಾದಿಸಿದ್ದರು.
ಅವರ ವಾದವನ್ನು ಗಮನಿಸಿದ ನ್ಯಾಯಾಧೀಶರು, ಜಾಮೀನು ಕೊಡಲು ನಿರಾಕರಿಸಿದ್ದಾರೆ. ಆರೋಪಿ ಬೈರತಿ ಬಸವರಾಜ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಶನಿವಾರ ವರದಿ ಸಲ್ಲಿಸುವಂತೆ ಮತ್ತು ಆರೋಪಿಯನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ.
ಶನಿವಾರ ಸಲ್ಲಿಕೆಯಾಗುವ ವೈದ್ಯಕೀಯ ಪರೀಕ್ಷಾ ವರದಿಯನ್ನು ಆಧರಿಸಿ ಅವರಿಗೆ ಜಾಮೀನು ನೀಡಬೇಕೇ-ಇಲ್ಲವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆಗಳಿವೆ.
ಏನಿದು ಬಿಕ್ಲು ಶಿವು ಹತ್ಯೆ ಪ್ರಕರಣ?
2025ರ ಜುಲೈ 15ರಂದು ಬೆಂಗಳೂರಿನ ಭಾರತಿನಗರದ ಮನೆಯ ಬಳಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆಸ್ತಿ ವಿವಾದ ಮತ್ತು ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂದು ಹೇಳಲಾಗಿದೆ.
ತನಿಖೆಯ ವೇಳೆ ಸಿಐಡಿ ಪೊಲೀಸರಿಗೆ ಬಿಕ್ಲು ಶಿವನ ಮೊಬೈಲ್ನಲ್ಲಿ ಶಾಸಕರು ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ಲಭ್ಯವಾಗಿದೆ. ಅಲ್ಲದೆ, ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕರು ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಸವರಾಜ್ 5ನೇ ಆರೋಪಿ (A5) ಆಗಿದ್ದು, ಕೊಲೆಯ ಸಂಚು ರೂಪಿಸಿದ ಪ್ರಮುಖ ವ್ಯಕ್ತಿ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಶಾಸಕರು ಬಂಧನ ಭೀತಿಯಿಂದ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು.





