ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಡಿ.10) ಟಿ.ಎನ್.ಸೀತಾರಾಂ ಅವರ ‘ನೆನಪಿನ ಪುಟಗಳು’ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
“ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನ ಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971ರಲ್ಲಿ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಕೂಡ ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ” ಎಂದು ತಿಳಿಸಿದರು.
ಮುಖ್ಯಮಂತ್ರಿ @siddaramaiah ಅವರು ಹೆಸರಾಂತ ನಿರ್ದೇಶಕ, ಬರಹಗಾರ ಟಿ.ಎನ್.ಸೀತಾರಾಮ್ ಅವರ ನೆನಪಿನ ಪುಟಗಳು ಪುಸ್ತಕ ಲೋಕಾರ್ಪಣೆ ಮಾಡಿ, ಶುಭ ಕೋರಿದರು. pic.twitter.com/auxnYsdtOI
— CM of Karnataka (@CMofKarnataka) December 10, 2023
“ಜನತಾ ಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪಕ್ಷದ ನಾಯಕರು ನನಗೆ ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ನಂತರ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದ ಬಳಿಕ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985ರಲ್ಲಿ ಜನತಾದಳದಲ್ಲಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು” ಎಂದ ಸಿಎಂ, ಆ ಸಂದರ್ಭದಲ್ಲಿ ತನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪುಗಳನ್ನು ಸ್ಮರಿಸಿಕೊಂಡರು.
“ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ಅವರ ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ , ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು. ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನುಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಿದ್ದೇನೆ” ಎಂದು ಸಿದ್ದರಾಮಯ್ಯ ತಿಳಿಸಿದರು.





