ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಚುನಾವಣೆ ತಯಾರಿ ಭಾಗವಾಗಿ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್ನ ನಾಯಕರು ಮತ್ತು ರಾಜ್ಯ ನಾಯಕರು ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಬಂಗಾಳ ರಾಜ್ಯಾಧ್ಯಕ್ಷ ಸುಬಾಂಕರ್ ಸರ್ಕಾರ್, ಸಂಸದ ಇಶಾ ಖಾನ್ ಚೌಧರಿ ಹಾಗೂ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಬಂಗಾಳ ಚುನಾವಣೆಯಲ್ಲಿ ಪಕ್ಷವು ತನ್ನ ನೆಲೆಯನ್ನು ಕಂಡುಕೊಳ್ಳಲು, ಉತ್ತಮ ಪ್ರದರ್ಶನ ನೀಡಲು ನಡೆಸಬೇಕಾದ ಪ್ರಮುಖ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಗುಲಾಂ ಅಹ್ಮದ್ ಮಿರ್ ತಿಳಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಬಂಗಾಳದಲ್ಲಿ ಪಕ್ಷವು ಮೈತ್ರಿಯಲ್ಲಿ ಸ್ಪರ್ಧಿಸಿತ್ತು. ಆ ಮೈತ್ರಿಯಿಂದಾಗಿ ಪಕ್ಷದ ತಳಮಟ್ಟದ ಕಾರ್ಯಕರ್ತರು ಉತ್ಸಾಹ ಕಳೆದುಕೊಂಡಿದ್ದರು. ಈ ಬಾರಿ, ಏಕಾಂಗಿ ಸ್ಪರ್ಧೆಯಿಂದ ಕಾರ್ಯಕರ್ತರು ಆತ್ಮಸ್ಥೈರ್ಯದಿಂದ ಕೆಲಸ ಮಾಡುವ ಭರವಸೆ ಇದೆ ಎಂದು ಅವರು ಹೇಳಿಕೊಂಡಿದ್ದಾರೆ.
2021ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಎಡರಂಗದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಆದಾಗ್ಯೂ, ಎಡರಂಗವಾಗಲೀ, ಕಾಂಗ್ರೆಸ್ ಆಗಲೀ ಒಂದೂ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.





