- ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ
- ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಮಂಗಳವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು” ಎಂದರು.
144 ಸೆಕ್ಷನ್ ಜಾರಿ
“ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು. ಆದರೆ ಬಿಜೆಪಿಯವರು ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು” ಎಂದು ಅವರು ಲೇವಡಿ ಮಾಡಿದರು.
ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು? ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ” ಎಂದರು.
“ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?
ಸಂಕಷ್ಟ ಪರಿಹಾರ ಸೂತ್ರ ರೂಪಿಸಲು ಒತ್ತಡ
“ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂತಹ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು” ಎಂದರು
ಮೇಕೆದಾಟು ಜಲಾಶಯದಿಂದ ಪರಿಹಾರ
“ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು” ಎಂದು ಅಭಿಪ್ರಾಯಪಟ್ಟರು.
ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುತ್ತಿವೆ
ಎನ್ಡಿಎಯಿಂದ ಎಐಎಡಿಎಂಕೆ ಹೊರಗೆ ಬಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇಡೀ ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಾಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಳ್ಳುತ್ತಿವೆ” ಎಂದರು.





