ಪಶ್ಚಿಮ ಬಂಗಾಳದಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯನ್ನು ಮೇಲ್ವಿಚಾರಣೆ ಮಾಡಲು ಕೋಲ್ಕತ್ತಾ ಹೈಕೋರ್ಟ್ ಭಾನುವಾರ ಪಶ್ಚಿಮ ಬಂಗಾಳದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.
ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್, ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಅಗರ್ವಾಲ್ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್) ನಂದಿನಿ ಚಕ್ರವರ್ತಿ ಅವರೊಂದಿಗೆ ಸಭೆ ನಡೆಸಿ, ಬಳಿಕ ಪ್ರತಿ ಜಿಲ್ಲೆಯಲ್ಲಿ ಸಮಿತಿಯನ್ನು ರಚಿಸಲು ನಿರ್ಧರಿಸಿದರು.
ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಸುಮಾರು 250 ನ್ಯಾಯಾಂಗ ಅಧಿಕಾರಿಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಅವರ ನೇತೃತ್ವದ ಸಮಿತಿಯು ಸೋಮವಾರದಿಂದ ಎಸ್ಐಆರ್ ದಾಖಲೆಗಳ ಪರಿಶೀಲನೆಯನ್ನು ಪ್ರಾರಂಭಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಕೂಡ ಅಧಿಸೂಚನೆ ಹೊರಡಿಸಿದ್ದಾರೆ.
ಶುಕ್ರವಾರದ ಸುಪ್ರೀಂ ಕೋರ್ಟ್ ಸೂಚನೆಯಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಶನಿವಾರ ಮುಖ್ಯ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರು, ಸಿಇಒ ಮನೋಜ್ ಅಗರ್ವಾಲ್, ಚುನಾವಣಾ ಆಯೋಗದ ಪ್ರತಿನಿಧಿಗಳು ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವು ಫೆಬ್ರವರಿ 28ರೊಳಗೆ ನಡೆಯುತ್ತಿರುವ ಎಸ್ಐಆರ್ ಅನ್ನು ಹೇಗೆ ಪೂರ್ಣಗೊಳಿಸುವುದು ಎಂಬುದರ ಕುರಿತು ಚರ್ಚಿಸಿದರು.
ರಾಜ್ಯದಲ್ಲಿ ಎಸ್ಐಆರ್ ಬಳಿಕದ ಪಟ್ಟಿಗಳನ್ನು ಬಿಡುಗಡೆ ಮಾಡುವ ಮೊದಲು ‘ತಾರ್ಕಿಕ ವ್ಯತ್ಯಾಸಗಳಿಗೆ’ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮಾರ್ಚ್ 9ರವರೆಗೆ ನ್ಯಾಯಾಂಗ ಅಧಿಕಾರಿಗಳ ರಜೆಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ರಜೆಯಲ್ಲಿರುವ ನ್ಯಾಯಾಧೀಶರು ಸಹ ಸೇವೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ ಸೇವೆ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಇಲ್ಲದಿದ್ದರೆ ಯಾವುದೇ ನ್ಯಾಯಾಂಗ ಅಧಿಕಾರಿ ರಜೆ ತೆಗೆದುಕೊಳ್ಳುವಂತಿಲ್ಲ.





