ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಆಧಾರಿತ ಜಾತಿ ಸಮೀಕ್ಷೆಯನ್ನು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಿರಂತರವಾಗಿ ಟೀಕಿಸುತ್ತಿವೆ. ವಿರೋಧ ವ್ಯಕ್ತಪಡಿಸುತ್ತಿವೆ. ಮಾತ್ರವಲ್ಲ, ಸಮೀಕ್ಷೆ ಸಹಕರಿಸದಂತೆ ಜನರನ್ನು ಪ್ರೇರೇಪಿಸುತ್ತಿವೆ. ಇದೀಗ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೂಡ ಜಾತಿ ಸಮೀಕ್ಷೆ ವಿರುದ್ಧ ಮಾತನಾಡಿದ್ದಾರೆ. ‘ಈ ಸಮೀಕ್ಷೆಯು ರಾಜ್ಯದ ಜನರ ಕಲ್ಯಾಣಕ್ಕಾಗಿ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಹಸ್ಯ ಅಜೆಂಡಾಗಳಿಗಾಗಿ ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಸಮೀಕ್ಷೆಯಿಂದ ಸರ್ಕಾರ ಏನು ಸಾಧಿಸುತ್ತದೆ? ಜನರು ಅದಕ್ಕೆ ಎಷ್ಟರ ಮಟ್ಟಿಗೆ ಪ್ರತಿಕ್ರಿಯಿಸಿದ್ದಾರೆ? ಎಲ್ಲ ಜಾತಿಗಳಲ್ಲಿ ಬಡವರು ಮತ್ತು ಅನಕ್ಷರಸ್ಥರು ಇದ್ದಾರೆ. ಸರ್ಕಾರ ಮೊದಲು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು. ರಾಜ್ಯದಲ್ಲಿ ಶಿಕ್ಷಕರು, ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ದೊಡ್ಡ ಕೊರತೆಯಿದೆ” ಎಂದು ಹೇಳಿದ್ದಾರೆ.
ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆಗೆ ವಿರೋಧ: OBCಗಳನ್ನು ವಂಚಿಸುವ ತಂತ್ರ
“ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ, ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನಿರ್ವಹಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೇಳುವಂತೆ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಸಭೆ ನಡೆಸಿ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಿದ್ದರು. ಈಗ ಅವರು ಬೇಜವಾಬ್ದಾರಿಯ ಹೇಳಿಕೆ ನೀಡುತ್ತಿದ್ದಾರೆ” ಎಂದು ದೂರಿದ್ದಾರೆ.
ನವೆಂಬರ್ ಅಂತ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಇದು ಕಾಂಗ್ರೆಸ್ನ ಆಂತರಿಕ ವಿಷಯ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದಿದ್ದಾರೆ.




