‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಸಾಧ್ಯತೆಗಳನ್ನು ಕಂಡುಕೊಳ್ಳಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ.
ಕೇಂದ್ರ ಸರ್ಕಾರವು ಸೆ.18 ರಿಂದ 22ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆದ ಒಂದು ದಿನದ ನಂತರ ಈ ಸಮಿತಿ ರಚಿಸಲಾಗಿದೆ.
ಸಮಿತಿಗೆ ಉಳಿದ ಸದಸ್ಯರನ್ನು ನೇಮಕ ಮಾಡಿದ ಬಳಿಕ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವುದರ ಸಾಧಕ- ಬಾಧಕಗಳ ಕುರಿತು ಅಧ್ಯಯನ, ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ದೇಶಾದ್ಯಂತ ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯ ಉದ್ದೇಶವಾಗಿದೆ. ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಜನರು ಒಂದೇ ಬಾರಿಗೆ ಮತ ಚಲಾಯಿಸುವಂತಾದರೆ ಸಮಯ ಹಾಗೂ ಭಾರಿ ಹಣದ ಉಳಿತಾಯವಾಗಲಿದೆ ಎನ್ನುವುದು ಕೇಂದ್ರ ಸರ್ಕಾರದ ವಾದವಾಗಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್ ತಿಮ್ಮಯ್ಯ ವಜಾ
ಇದೇ ವರ್ಷ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಅಥವಾ ಜೂನ್ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ‘ಒಂದು ರಾಷ್ಟ್ರ ಒಂದು ಚುನಾವಣೆ’ಯ ಪ್ರಬಲ ಪ್ರತಿಪಾದಕರಾಗಿದ್ದಾರೆ. ನಿರಂತರ ಚುನಾವಣಾ ಚಕ್ರದಿಂದ ಉಂಟಾಗುವ ಆರ್ಥಿಕ ಹೊರೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗಿದೆ ಎಂಬುದು ಪ್ರಧಾನಿಯವರು ಉಲ್ಲೇಖವಾಗಿದೆ.
ಈ ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಸಂಸತ್ನ ವಿಶೇಷ ಅಧಿವೇಶನ ಕರೆದಿರುವುದು ಇದು ಮೊದಲ ಬಾರಿಯಾಗಿದೆ. 2017ರ ಜೂನ್ 30ರ ಮಧ್ಯರಾತ್ರಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿ ಉದ್ದೇಶದಿಂದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಶೇಷ ಜಂಟಿ ಕಲಾಪ ನಡೆಸಲಾಗಿತ್ತು. ಆದರೆ ಈ ಬಾರಿ ಐದು ದಿನಗಳ ಕಾಲ ಸಂಸತ್ನ ಉಭಯ ಸದನಗಳಲ್ಲಿ ಪೂರ್ಣ ಪ್ರಮಾಣದ ಪ್ರತ್ಯೇಕ ಕಲಾಪಗಳು ನಡೆಯಲಿವೆ.





