ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು ಬಾಲ್ಯವಿವಾಹ ನಡೆದಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಇದು ತಲೆತಗ್ಗಿಸುವ ಮತ್ತು ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.
ಬಾಲ್ಯವಿವಾಹ ಸಂಬಂಧ ಬುಧವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, “ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಅಸ್ಸಾಂ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ಬಾಲ್ಯವಿವಾಹಗಳು ನಡೆದಿವೆ” ಎಂದು ಹೇಳಿದೆ.
ಕೇಂದ್ರ ಸರ್ಕಾರ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ತಮಿಳುನಾಡಿನಲ್ಲಿ 8,966, ಕರ್ನಾಟಕದಲ್ಲಿ 8,348, ಪಶ್ಚಿಮ ಬಂಗಾಳದಲ್ಲಿ 8,324, ತೆಲಂಗಾಣದಲ್ಲಿ 4,440, ಆಂಧ್ರ ಪ್ರದೇಶದಲ್ಲಿ 3,416, ಅಸ್ಸಾಂನಲ್ಲಿ 3,316, ಮಹಾರಾಷ್ಟ್ರದಲ್ಲಿ 2,043, ಗುಜರಾತ್ನಲ್ಲಿ 1,206, ಉತ್ತರ ಪ್ರದೇಶದಲ್ಲಿ 1,197 ಹಾಗೂ ಹರಿಯಾಣದಲ್ಲಿ 1,104 ಬಾಲ್ಯವಿವಾಹಗಳು ನಡೆದಿವೆ.
ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, “ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ. ಇದು ಜವಾಬ್ದಾರಿ ಸ್ಥಾನದಲ್ಲಿರುವ ಮಹಿಳಾ ಮಂತ್ರಿಯಾಗಿ ತಲೆ ತಗ್ಗಿಸುವ ವಿಚಾರ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಬಾಲ್ಯವಿವಾಹ ತಡೆಗಾಗಿ ನಮ್ಮ ಇಲಾಖೆಯಿಂದ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಇದಕ್ಕೆ ಕೇವಲ ನಮ್ಮ ಇಲಾಖೆಯ ಲೋಪದೋಷವೆಂದು ಹೇಳಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯತಿ, ಶಾಲೆಗಳು, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೂಡ ಬೇಕು. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಿದರೆ ಮಾತ್ರವೇ ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ” ಎಂದಿದ್ದಾರೆ.
“ಬಾಲ್ಯವಿವಾಹಗಳನ್ನು ಮೂಡನಂಬಿಕೆಯಿಂದ ಮಾಡುತ್ತಾರೋ ಅಥವಾ ಬೇರೆ ಕಾರಣಗಳಿವೆಯೇ ಎಂಬುದೇ ಸರಿಯಾಗಿ ತಿಳಿಯುತ್ತಿಲ್ಲ. ಬಾಲ್ಯವಿವಾಹ ತಡೆಗಾಗಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಹೇಳಿದ್ದಾರೆ.




