“ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡುತ್ತಿದ್ದ ವೇಳೆ, “ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ” ಬಗ್ಗೆ ಕೇಳಿದಾಗ, “ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ-ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ” ಎಂದು ತಿಳಿಸಿದರು.
“ಸಚಿವ ಸ್ಥಾನ ಬಿಡಲು ಸಿದ್ಧ ನನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ” ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅದಕ್ಕೆ ಉತ್ತರ ಕೊಡುತ್ತೇವೆ” ಎಂದರು.
ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ:
“ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ತಿಳಿಸಿದ್ದೇವೆ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ರಾಜ್ಯಕ್ಕಾಗಿ ದೆಹಲಿಯಲ್ಲಿ ಪಕ್ಷಭೇದ ಮರೆತು ಒಂದಾದ ರಾಜಕೀಯ ಮುಖಂಡರು
“ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ” ಎಂದರು.





