- ಭಾಗವಹಿಸದಂತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಾಡಿನ ಹಲವರು
- ‘ಅಧಿಕೃತವಾಗಿ ಫಿಕ್ಸ್ ಆಗಿರಲಿಲ್ಲ’ ಎಂದ ಸಿಎಂ ಆಪ್ತ ಕಚೇರಿಯ ಮೂಲ
ಸೋಷಿಯಲ್ ಮೀಡಿಯಾ ಸೇರಿದಂತೆ ನಾಡಿನಾದ್ಯಂತ ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ‘ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮ’ದಿಂದ ಕೊನೆಗೂ ಸಿಎಂ ಸಿದ್ದರಾಮಯ್ಯ ದೂರ ಉಳಿದಿದ್ದಾರೆ.
ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಶನಿವಾರ(ಜು.22) ಆಯೋಜಿಸಿದ್ದ ಈ ಸಮಾರಂಭಕ್ಕೆ, ‘ದ್ವೇಷ ಹರಡುವ ಪತ್ರಕರ್ತನ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೂ ಹೋಗಬಾರದು’ ಎಂದು ನಾಡಿನ ಚಿಂತಕರು ಹಾಗೂ ಪ್ರಗತಿಪರರು ಆಗ್ರಹಿಸಿದ್ದರು.
ಅಲ್ಲದೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಕೂಡ ಟ್ವೀಟ್ ಮಾಡಿ, ‘ದಯವಿಟ್ಟು ಒಮ್ಮೆ ಯೋಚಿಸಿ. ಇದು ತಮಗೆ ಶೋಭೆಯಲ್ಲ’ ಎಂದು ತಿಳಿಸಿದ್ದರು. ಬಳಿಕ ವಿಶ್ವೇಶ್ವರ ಭಟ್ ಮತ್ತು ಪ್ರಕಾಶ್ ರೈ ನಡುವೆ ‘ಟ್ವೀಟ್ ವಾರ್’ ನಡೆದು, ವಿಶ್ವೇಶ್ವರ ಭಟ್ ವೈಯಕ್ತಿಕ ವಿಚಾರಗಳನ್ನು ಕೂಡ ಕೆಣಕಿದ್ದರು.
ಈ ನಡುವೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಕೂಡ ನಡೆದಿತ್ತು.

ಇಂದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆಯೇ ಎಂದು ಸಿಎಂ ಆಪ್ತ ವಲಯವನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ, ‘ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಭಾಗವಹಿಸುವುದು ಅಧಿಕೃತವಾಗಿ ಫಿಕ್ಸ್ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.
ಆದರೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಮುದ್ರಿಸಲಾಗಿತ್ತು.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಸಿಎಂ ಭಾಗವಹಿಸದಿರುವ ಬಗ್ಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ವೇದಿಕೆಯಲ್ಲೇ ಮಾತನಾಡಿರುವ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, “ಅನಿವಾರ್ಯ ಕಾರಣಗಳಿಂದ ಈ ಕಾರ್ಯಕ್ರಮಕ್ಕೆ ಬರಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರ ‘ಅನಿವಾರ್ಯತೆ’ ಏನು ಎನ್ನುವುದು ಇಲ್ಲಿರುವ ಎಲ್ಲರಿಗೂ ಅರ್ಥವಾಗುತ್ತದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿ, ಪುಸ್ತಕ ಬಿಡುಗಡೆ ಮಾಡಿದ್ದಾರೆ. ಉಳಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಿದ್ದರು.





