ಸೆಬಿ ಮುಖ್ಯಸ್ಥರು ಮತ್ತು ಉದ್ಯಮ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಹೆಂಡೆನ್ಬರ್ಗ್ ವರದಿ ಆರೋಪಗಳನ್ನು ಮಾಡಿದೆ ಈ ಆರೋಪಗಳು ದೇಶಾದ್ಯಂತ ಭಾರೀ ಗದ್ದಲ ಸೃಷ್ಟಿಸಿವೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ನಡುವೆ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ರಾಜೀನಾಮೆ ನೀಡಬೇಕು ಮತ್ತು ಅದಾನಿ ಸಂಸ್ಥೆಯ ಬಗ್ಗೆ ಕೇಳಿಬಂದಿರುವ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಆಗಸ್ಟ್ 22ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಆಗಸ್ಟ್ 10ರಂದು ‘ಹಿಂಡೆನ್ಬರ್ಗ್ ರಿಸರ್ಚ್’ ವರದಿಯನ್ನು ಬಿಡುಗಡೆ ಮಾಡಿದ್ದು, ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅವರು ಅದಾನಿ ಹಣ ಹಗರಣದಲ್ಲಿ ಬಳಸಲಾಗಿರುವ ವಿದೇಶಿ ಹೂಡಿಕೆ ಮತ್ತು ನಿಧಿಗಳಲ್ಲಿ ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಿದೆ.
ವರದಿ ಬಂದ ಬಳಿಕ, ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ನ ಎಲ್ಲ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. “ಸೆಬಿ ಮತ್ತು ಅದಾನಿ ನಡುವಿನ ಸಂಬಂಧಗಳ ಬಗ್ಗೆ ಆಘಾತಕಾರಿ ವರದಿಯು ಬಹಿರಂಗವಾಗಿದೆ. ಆ ಬಗ್ಗೆ ಸಂಪೂರ್ಣ ತನಿಖೆಯ ಅಗತ್ಯವಿದೆ. ಷೇರು ಮಾರುಕಟ್ಟೆಯಲ್ಲಿನ ಸಣ್ಣ ಹೂಡಿಕೆದಾರರ ಹಣವನ್ನು ಅಪಾಯಕ್ಕೆ ಸಿಲುಕಿಸಲು ಯತ್ನಿಸಲಾಗಿದೆ. ಅದನ್ನು ತಡೆಯಬೇಕು” ಎಂದು ಖರ್ಗೆ ಹೇಳಿದ್ದಾರೆ.
ಸಭೆಯ ಬಳಿಕ ಟ್ವೀಟ್ ಮಾಡಿರುವ ಅವರು, “ಮೋದಿ ಸರ್ಕಾರವು ತಕ್ಷಣವೇ ಸೆಬಿ ಅಧ್ಯಕ್ಷರಿಂದ ರಾಜೀನಾಮೆ ಪಡೆಬೇಕು. ಸೆಪಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸಲು ಜೆಪಿಸಿಯನ್ನು ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಸಭೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ ವೇಣುಗೋಪಾಲ್, “ಸೆಬಿ ಮುಖ್ಯಸ್ಥರ ರಾಜೀನಾಮೆ ಮತ್ತು ಅದಾನಿ ವಿಷಯದ ಬಗ್ಗೆ ಜೆಪಿಸಿ ತನಿಖೆಗೆ ಒತ್ತಾಯಿಸಿ ಆಗಸ್ಟ್ 22ರಂದು ಪಕ್ಷವು ರಾಷ್ಟ್ರವ್ಯಾಪಿ ಆಂದೋಲನ ನಡೆಸಲಿದೆ” ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುವ ಪಿತೂರಿ ನಡೆಸುತ್ತಿದೆ. ಈ ಅಕ್ರಮವು ಅದರ ಪಿತೂರಿಯ ಭಾಗವಾಗಿದೆ” ಎಂದು ಆರೋಪಿಸಿದೆ.
ಹಿಂಡೆನ್ಬರ್ಗ್ನ ಆರೋಪಗಳನ್ನು ಸೆಬಿ ತಳ್ಳಿಹಾಕಿದೆ. “ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಸೂಕ್ತ ತನಿಖೆ ಮಾಡಲಾಗಿದೆ” ಎಂದು ಹೇಳಿದೆ.




