ಮನರೇಗಾ ಹೆಸರು ಬದಲಾವಣೆ ಮಾಡಿ, ಮನರೇಗಾವನ್ನೇ ರದ್ದು ಮಾಡಿರುವುದನ್ನು ವಿರೋಧಿಸಿ ಸಾರ್ವಜನಿಕ ಆಂದೋಲನ ಅಭಿಯಾನವನ್ನು ನಡೆಸಲಾಗುವುದು ಎಂದು ಕಾಂಗ್ರೆಸ್ ಸಂಸದ, ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೋಮವಾರ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಸದ್ಯ ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಾಯಿಸಲಾಗಿರುವ ಮನರೇಗಾ ಹಿನ್ನೆಲೆಯನ್ನು ಹಂಚಿಕೊಂಡಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ಈ ಕಾಯ್ದೆಗೆ ಕಾಂಗ್ರೆಸ್ ಹೇಗೆ ಅಡಿಪಾಯ ಹಾಕಿತು ಎಂಬುದನ್ನು ವಿವರಿಸಿದ್ದಾರೆ.
ಇದನ್ನು ಓದಿದ್ದೀರಾ? 40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್
“1970ರ ದಶಕದಲ್ಲಿ ತೀವ್ರ ಬರಗಾಲ ಉಂಟಾಗಿದ್ದು, ಅದಾದ ನಂತರ ವಿ.ಪಿ. ನಾಯಕ್ ನೇತೃತ್ವದಲ್ಲಿ ಮತ್ತು ವಿ.ಎಸ್. ಪೇಜ್ ಅವರ ಪ್ರೇರಣೆಯಿಂದ ಮಹಾರಾಷ್ಟ್ರದ ಕಾಂಗ್ರೆಸ್ ಸರ್ಕಾರವು ಗ್ರಾಮೀಣ ಸಂಕಷ್ಟವನ್ನು ನಿಭಾಯಿಸಲು ಉದ್ಯೋಗ ಖಾತರಿ ಯೋಜನೆಯನ್ನು ಪರಿಚಯಿಸಿತು. ಅದಾದ ಬಳಿಕ 1980ರ ದಶಕದ ಆರಂಭದಲ್ಲಿ, ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಎರಡು ಹೊಸ ಯೋಜನೆಗಳನ್ನು ಘೋಷಿಸಿದರು. ಅದುವೇ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಕಾರ್ಯಕ್ರಮ (NREP) ಮತ್ತು ಗ್ರಾಮೀಣ ಭೂರಹಿತ ಉದ್ಯೋಗ ಖಾತರಿ ಕಾರ್ಯಕ್ರಮ (RLEGP)” ಎಂದು ಉಲ್ಲೇಖಿಸಿದ್ದಾರೆ.
“1990ರ ದಶಕದ ಆರಂಭದಲ್ಲಿ, ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರು 100 ಬಡ ಜಿಲ್ಲೆಗಳಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ಘೋಷಿಸಿದರು. 2004ರ ಮಾರ್ಚ್ ಅಂತ್ಯದಲ್ಲಿ ಬಿಡುಗಡೆಯಾದ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಖಾತರಿಪಡಿಸಲು ಹೊಸ ಕಾನೂನನ್ನು ಜಾರಿಗೆ ತರುವುದಾಗಿ ಪ್ರತಿಜ್ಞೆ ಮಾಡಿತ್ತು” ಎಂದೂ ಹೇಳಿದ್ದಾರೆ.
“ಗ್ರಾಮೀಣ ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪರಿಶೀಲಿಸಲು ಕಾಂಗ್ರೆಸ್ ಮುಖ್ಯಮಂತ್ರಿಗಳು 2002ರ ಏಪ್ರಿಲ್ನಲ್ಲಿ ಸಭೆ ಸೇರಿದ ಎರಡು ವರ್ಷಗಳ ನಂತರ ಇದು ಸಂಭವಿಸಿದೆ. ಈ ಪ್ರತಿಜ್ಞೆಯು 2004ರ ಮೇ ತಿಂಗಳಲ್ಲಿ ಬಿಡುಗಡೆಯಾದ ಯುಪಿಎಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಭಾಗವಾಗಿತ್ತು” ಎಂದು ತಿಳಿಸಿದ್ದಾರೆ.
ಇನ್ನು ತಮ್ಮ ಪೋಸ್ಟ್ನಲ್ಲಿ, ದಿವಂಗತ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಾತ್ರವನ್ನೂ ಉಲ್ಲೇಖಿಸಿದ್ದಾರೆ. ‘ದಿ ಹಿಂದೂ’ ಪತ್ರಿಕೆಯಲ್ಲಿ ಸೋನಿಯಾ ಗಾಂಧಿಯವರ ಸೋಮವಾರದ ಸಂಪಾದಕೀಯವನ್ನು ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGA) ಅನ್ನು ರದ್ದುಗೊಳಿಸಿ, ಅದರ ಬದಲಿಗೆ ಹೊಸದಾದ ವಿಬಿ-ಜಿ ರಾಮ್ ಜಿ ಅಂದರೆ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ಕಂಡುಬಂದಿದೆ.
ಈ ಮೊದಲು ಕೇಂದ್ರ ಸರ್ಕಾರವೇ ಸಂಪೂರ್ಣ ಕೂಲಿ ವೆಚ್ಚವನ್ನು ಭರಿಸುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ, ರಾಜ್ಯ ಸರ್ಕಾರಗಳು ಯೋಜನೆಯ 40% ವೆಚ್ಚವನ್ನು ಭರಿಸಬೇಕಾಗುತ್ತದೆ. ಇದು ಆಂಧ್ರಪ್ರದೇಶದಂತಹ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವ ರಾಜ್ಯಗಳಿಗೆ ಹೊರೆಯಾಗಲಿದೆ ಎಂದು ಎನ್ಡಿಎ ಮಿತ್ರಪಕ್ಷವಾದ ಟಿಡಿಪಿ ಕೂಡ ಕಳವಳ ವ್ಯಕ್ತಪಡಿಸಿದೆ.





