ಭ್ರಷ್ಟ ವ್ಯವಸ್ಥೆಯಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ. ರಾಜಕಾರಣದಿಂದ ದೂರ ಉಳಿಯುವ ಬಗ್ಗೆ ಆಲೋಚಿಸಿದ್ದೇನೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, “ಭ್ರಷಾಚಾರದ ಕುರ್ಚಿಯ ಪಕ್ಕದಲ್ಲಿಯೂ ಕುಳಿತುಕೊಳ್ಳಲು ಇಷ್ಟ ಪಡುವುದಿಲ್ಲ. ರಾಜಕಾರಣದಲ್ಲಿರುವ ಭ್ರಷ್ಟಾಚಾರ ಕಣ್ಣಿಗೆ ಬಿದ್ದಾಗಲೇ ಈ ನಿರ್ಧಾರ ಕೈಗೊಂಡಿದ್ದೇನೆ” ಎಂದರು.
“ಮುಂಬರುವ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಲ್ಲ. ಭವಿಷ್ಯದ ರಾಜಕಾರಣದಿಂದಲೇ ಹೊರಗುಳಿಯುವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷದ ನಿಷ್ಠಾವಂತ ಸೇನಾನಿಯಾಗಿದ್ದು, ನಮ್ಮ ಪಕ್ಷ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಅಪೇಕ್ಷೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ
“ನಾನೇ ಅಭ್ಯರ್ಥಿಯಾಗಬೇಕು, ನನ್ನ ಮಕ್ಕಳು ರಾಜಕಾರಣಕ್ಕೆ ಬರಬೇಕು ಎಂಬ ಬಯಕೆ ನನಗಿಲ್ಲ. ಪಕ್ಷದ ಸೂಚನೆಯ ಮೇರೆಗೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಪಕ್ಷ ಗುರುತಿಸಿ ಮಂತ್ರಿ ಮಾಡಿದೆ, ಅಷ್ಟು ಸಾಕು. ದೂರದಿಂದ ಚಿತ್ರದುರ್ಗಕ್ಕೆ ಬಂದಿದ್ದ ನನ್ನನ್ನು ಮತದಾರರು ಲೋಕಸಭೆಗೆ ಆಯ್ಕೆ ಮಾಡಿದರು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ” ಎಂದರು.
“ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ ಅವಕಾಶ ಸಿಕ್ಕರೆ ನಾನು ಸ್ವಾಗತಿಸುತ್ತೇನೆ. ಆಂತರಿಕ ಸಮೀಕ್ಷೆ ಆಧರಿಸಿ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ. ಅದಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಹೇಳಿದರು.





