“ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷಕ್ಕಾಗಿ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ, ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಎಲ್ಲ ಸಮಾಜಗಳಿಗೂ ಅವಕಾಶ ಮಾಡಿಕೊಡಬೇಕು. 300ಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲ ವರ್ಗದವರಿಗೂ ಈ ಬಾರಿ ಅವಕಾಶ ಮಾಡಿಕೊಡಲು ಆಗಿಲ್ಲ” ಎಂದರು.
“ಪ್ರಾಥಮಿಕವಾಗಿ ಒಂದಷ್ಟು ಹೆಸರುಗಳನ್ನು ನಾವು ಸೂಚಿಸಿದ್ದೇವೆ. ಜೊತೆಗೆ ಸಚಿವರು, ಎಐಸಿಸಿ ಕಾರ್ಯದರ್ಶಿಗಳು ತಮ್ಮ ಆಯ್ಕೆಗಳನ್ನು ಶಿಫಾರಸ್ಸು ಮಾಡಿದ್ದಾರೆ. ಮುಂದಿನ ಎರಡು ವರ್ಷಗಳ ನಂತರ ಮತ್ತೊಮ್ಮೆ ಇದೇ ರೀತಿ ಅವಕಾಶ ಬರುವ ಕಾರಣ, ಅವರಿಗೆಲ್ಲ ಮುಂದಿನ ಬಾರಿ ಸ್ಥಾನ ನೀಡಲಾಗುವುದು. ಈಗ ಏಳರಿಂದ- ಎಂಟು ಮಂದಿಗೆ ಅವಕಾಶ ಮಾಡಿಕೊಡಲಾಗುವುದು. ಪಕ್ಷ ಸಂಘಟನೆಗೆ ದುಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು” ಎಂದರು.
“ಪಕ್ಷ ಏನು ಹೇಳುತ್ತದೆ ಅದರಂತೆ ಕೇಳಬೇಕು. ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಗಳ ಬಳಿಯು ಪಟ್ಟಿ ತೆಗೆದುಕೊಳ್ಳುತ್ತದೆ. ಚುನಾವಣಾ ಸಮಯದಲ್ಲಿ ಕೆಲಸ ಮಾಡಿದವರು ಯಾರು, ಅವರ ಹಿನ್ನೆಲೆ, ತ್ಯಾಗ, ಶ್ರಮ ಪಟ್ಟಿರುವರ ಹೆಸರು ಹೈಕಮಾಂಡ್ಗೆ ಸಲ್ಲಿಕೆಯಾಗುತ್ತದೆ. ಹಿರಿಯರು, ಯುವಕರು ಸೇರಿದ ಸಮತೋಲನದ ಪಟ್ಟಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಕುಟುಂಬದವರಿಗೆ ಬೇಡ ಕಾರ್ಯಕರ್ತರಿಗೆ ನೀಡಿ ಎನ್ನುವ ಮಾತು ಕೇಳಿಬರುತ್ತಿದೆ ಎಂದಾಗ, “ಯಾವ ಕುಟುಂಬದವರಿಗೂ ಇಲ್ಲ. ಶಾಸಕ ಸ್ಥಾನ ಬಿಟ್ಟು ಕೊಟ್ಟ ಕಾರಣಕ್ಕೆ, ಒಂದು ಸ್ಥಾನಕ್ಕೆ ಮಾತ್ರ ಈ ಮೊದಲು ಮಾತು ಕೊಟ್ಟಂತೆ ನೀಡಲಾಗುವುದು. ನಾವು ಕೆಲವರಿಗೆ ಮಾತು ಕೊಟ್ಟಿದ್ದೇವೆ. ಆ ಮಾತಿನಂತೆ ಕೆಲವೊಂದು ಸಂದರ್ಭದಲ್ಲಿ ನಡೆದುಕೊಳ್ಳಬೇಕಾಗುತ್ತದೆ” ಎಂದು ಸ್ಪಷ್ಟಪಡಿಸಿದರು.
ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ತನಿಖೆ ನಡೆಸಲು ಈಗಾಗಲೇ ಸಿಎಂ ಮತ್ತು ಗೃಹ ಸಚಿವರು ಸೂಚನೆ ನೀಡಿದ್ದಾರೆ. ಅತ್ಯಂತ ಕೂಲಂಕಷವಾಗಿ ತನಿಖೆ ನಡೆಸಲಾಗುವುದು. ಈ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದರು.





