ಕರ್ನಾಟಕದಲ್ಲಿ ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು.ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಪರಮೇಶ್ವರ್ ಬೆಂಬಲಿಗರು ದೆಹಲಿಯ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಹೇಳಲಾಗುತ್ತಿದ್ದರೂ, ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಚರ್ಚೆ ಮುಂದುವರೆದೇ ಇದೆ. ಮಾಧ್ಯಮಗಳು ಮತ್ತು ವಿಪಕ್ಷಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೆಚ್ಚು ಮಾತನಾಡುತ್ತಿವೆ. ಇದೇ ಸಮಯದಲ್ಲಿ, ಪರಮೇಶ್ವರ್ ಬೆಂಬಲಿಗರು ದೆಹಲಿ ಹೈಕಮಾಂಡ್ ಕದ ತಟ್ಟಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಪರಮೇಶ್ವರ್ ಬೆಂಬಲಿಗರು, “ಕರ್ನಾಟಕಲ್ಲಿ ನಾಯಕತ್ವ ಬದಲಾವಣೆ ಮಾಡುವುದಾದರೆ, ದಲಿತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಬೇಕು. ಅದರಲ್ಲೂ, ಗೃಹ ಸಚಿವ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು” ಎಂದು ಒತ್ತಾಯಿಸಿದ್ದಾರೆ.
“ದಲಿತ ಸಮುದಾಯವು ದಶಕಗಳಿಂದ ಕಾಂಗ್ರೆಸ್ಗೆ ಬೆಂಬಲವಾಗಿ ನಿಂತಿದೆ. ದಲಿತ ನಾಯಕರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ನೀಡಬೇಕು. 2013ರಲ್ಲಿ ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲಿಲ್ಲ. ಈ ಬಾರಿಯೂ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಗೆಲ್ಲುವಲ್ಲಿ ದಲಿತ ಸಮುದಾಯದ ಬೆಂಬಲ ಕಾರಣ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಿ, ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.
ಇನ್ನು, ಪರಮೇಶ್ವರ್ ಬೆಂಬಲಿಗರು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನೂ ಭೇಟಿ ಮಾಡಿದ್ದಾರೆ. ಅಲ್ಲದೆ, ಸೋನಿಯ ಗಾಂಧಿ ಅವರ ನಿವಾಸಕ್ಕೂ ಮನವಿ ಪತ್ರ ಕಳಿಸಿದ್ದಾರೆ.
ಕಾಂಗ್ರೆಸ್ ಸಂಸದ ತೋಲ್ ತಿರುಮಾವಳವನ್ ಕೂಡಾ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.




