“ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ವೈಯಾಲಿಕಾವಲ್ನ ಐಪಿಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರಾ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ” ಎಂದು ತಿಳಿಸಿದರು.
“ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್ ಜೊತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ” ಎಂದರು.
ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಹಗರಣ | ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
“ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು, ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.





