- ಕಾಂಗ್ರೆಸ್ಗೆ ವಲಸೆ ಬಂದ ಶಾಸಕರಿಗೆ ಸಿಕ್ಕಿಲ್ಲ ಸಚಿವ ಸ್ಥಾನ
- ಅತೃಪ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಮಾತ್ರವೇ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿದ್ದು, ಉಳಿದ ಎಂಟು ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ.
ಬೆಂಗಳೂರು ನಗರ ಜಿಲ್ಲೆಗೆ ಅತಿ ಹೆಚ್ಚು ಅಂದರೆ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.
ಉಳಿದಂತೆ ತುಮಕೂರು, ವಿಜಯಪುರ, ಕಲಬುರಗಿ, ಸೇರಿದಂತೆ ಐದು ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ, 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.
ವಲಸೆ ಬಂದವರಿಗೆ ಇಲ್ಲ ಸಚಿವ ಸ್ಥಾನ
ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ನತ್ತ ವಲಸೆ ಬಂದಿರುವ ಎಲ್ಲರಿಗೂ ಸಚಿವ ಸ್ಥಾನದ ಭರವಸೆ ನೀಡಲಾಗಿದ್ದು, ಅದು ಈಗ ಕಾಂಗ್ರೆಸ್ಗೆ ಮತ್ತು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಪ್ರಮುಖವಾಗಿ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಅಶೋಕ್ ರೈ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ನಿಂದ ಕೆ ಎಂ ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ್, ಮಧು ಬಂಗಾರಪ್ಪ ಸೇರ್ಪಡೆಯಾಗಿ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾತೆ ತೆರೆಯುವಂತೆ ಮಾಡಿದ್ದಾರೆ. ಈ ಎಲ್ಲರಿಗೂ ಸಚಿವ ಸ್ಥಾನದ ಭರವಸೆ ನೀಡಿರುವ ಕಾಂಗ್ರೆಸ್ ಇದೀಗ ಮಾತು ಉಳಿಸಿಕೊಳ್ಳದೆ ಮುಜುಗರಕ್ಕೆ ಸಿಲುಕಿದೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದ ಜಾತಿ ಲೆಕ್ಕಾಚಾರ ಹೀಗಿದೆ
ವಂಚಿವರಿಗೆ ನಿಗಮ ಮಂಡಳಿಯ ಭರವಸೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಸರತ್ತು ನಡೆಸಿದರೂ ಸಚಿವ ಸ್ಥಾನ ಸಿಗದೆ ನಿರಾಶೆಯಾಗಿರುವ ಸುಮಾರು 30ಕ್ಕೂ ಹೆಚ್ಚು ಮಂದಿ ಶಾಸಕರಿಗೆ ನಿಗಮ-ಮಂಡಳಿಯಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿ ಸಂತೈಸಲು ತೀರ್ಮಾನಿಸಲಾಗಿದೆ.
ಸುಮಾರು 60ಕ್ಕೂ ಹೆಚ್ಚು ಶಾಸಕರು ಈ ಬಾರಿ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿದ್ದರು. ಆದರೆ, ಇವರಲ್ಲಿ ಕೇವಲ 24 ಮಂದಿ ಹೆಸರನ್ನು ಮಾತ್ರ ಅಂತಿಮಗೊಳಿಸಿದ್ದು, ಶನಿವಾರ ಈ ಎಲ್ಲರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.




