ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಗಂಭೀರ ದುಷ್ಕೃತ್ಯ ನಡೆಸಿದ, ಕರ್ತವ್ಯ ಲೋಪ ಮಾಡಿದ ಮತ್ತು ಅಧಿಕಾರ ದುರುಪಯೋಗ ಮಾಡಿದ ಆರೋಪದಲ್ಲಿ ಪಶ್ಚಿಮ ಬಂಗಾಳದ ಏಳು ಅಧಿಕಾರಿಗಳನ್ನು ಚುನಾವಣಾ ಆಯೋಗವು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
ಅಮಾನತುಗೊಂಡ ಎಲ್ಲಾ ಅಧಿಕಾರಿಗಳು ಚುನಾವಣಾ ಆಯೋಗದ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಈ ಅಧಿಕಾರಿಗಳು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ತಯಾರಿಸುವುದು ಮತ್ತು ಅದನ್ನು ಕಾಲಕಾಲಕ್ಕೆ ಪರಿಷ್ಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.
ಇದನ್ನು ಓದಿದ್ದೀರಾ? SIR ಅಪಾಯ ಬದಿಗಿಟ್ಟ ಕಾಂಗ್ರೆಸ್: ಮಮತಾ ಕೆಚ್ಚು ಸಿದ್ದರಾಮಯ್ಯಗೆ ಪಾಠವಾಗುವುದೇ?
“ಈ ಅಧಿಕಾರಿಗಳ ವಿರುದ್ಧ ಆಯಾ ಕೇಡರ್ ನಿಯಂತ್ರಣ ಅಧಿಕಾರಿಗಳು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಚುನಾವಣಾ ಆಯೋಗವು ರಾಜ್ಯ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಗೆ ಸೂಚಿಸಿದೆ. ಹಾಗೆಯೇ ಈ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದೂ ನಿರ್ದೇಶಿಸಿದೆ.
ಬಿಹಾರದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗವು ಸದ್ಯ ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಿದೆ. ಈವರೆಗೆ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಸುಮಾರು 6.5 ಕೋಟಿ ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಹುತೇಕವಾಗಿ ಮಹಿಳೆಯರು, ಅಲ್ಪಸಂಖ್ಯಾತರು, ದಲಿತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 58.20 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದ್ದು, ಇತ್ತೀಚೆಗೆ ಎಸ್ಐಆರ್ ವಿಚಾರಣೆ ನಡೆಸಲಾಗಿದ್ದು, ಹೆಚ್ಚುವರಿಯಾಗಿ 6.61 ಲಕ್ಷ ಹೆಸರುಗಳನ್ನು ತೆಗೆದುಹಾಕುವ ಸಾಧ್ಯತೆಯಿದೆ. ಈ ಪ್ರಕ್ರಿಯೆ ವೇಳೆ ಒತ್ತಡದಿಂದಾಗಿ 2025ರ ಅಂತ್ಯದ ವೇಳೆಗೆ ಸುಮಾರು 33ರಿಂದ 50ಕ್ಕೂ ಹೆಚ್ಚು ಬಿಎಲ್ಒಗಳು ಸಾವನ್ನಪ್ಪಿದ್ದಾರೆ. ಈ ಎಲ್ಲಾ ವಿಚಾರದಲ್ಲಿ ಚುನಾವಣಾ ಆಯೋಗ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರದ ನಡುವೆ ತೀವ್ರ ವಾಗ್ವಾದ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗಾಗಲೇ ಈ ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಾವೇ ಖುದ್ದಾಗಿ ವಾದ ಮಂಡಿಸಿದ್ದಾರೆ.





