ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರ ಜತೆಗೆ, ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೆದ್ದು ಸಂಸದರಾದವರ ಪೈಕಿ ಐವರು ಸಂಸದರು ನೂತನ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.
ಕೇಂದ್ರ ಸಂಪುಟದಲ್ಲಿ ಕರ್ನಾಟಕಕ್ಕೆ ಐದು ಸಚಿವ ಸ್ಥಾನ ಸಿಕ್ಕಿರುವುದು ಖಾತರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ.
ಇನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದ ವಿ.ಸೋಮಣ್ಣ ಅವರಿಗೂ ಕೂಡ ಕೇಂದ್ರ ಸಚಿವ ಸ್ಥಾನ ಪಕ್ಕಾ ಆಗಿದೆ. ಅಲ್ಲದೇ, ಜನರಿಂದ ಹಾಗೂ ಸ್ವತಃ ಬಿಜೆಪಿ ಕಾರ್ಯಕರ್ತರಿಂದ ‘ಗೋ ಬ್ಯಾಕ್’ ಚಳುವಳಿ ಎದುರಿಸಿದ್ದ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಾಂದ್ಲಾಜೆ ಕೂಡ ಮತ್ತೊಮ್ಮೆ ಸಚಿವ ಗಾದಿ ಹಿಡಿಯಲಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಶಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈಗ ಕರ್ನಾಟಕದಿಂದ ಸಚಿವರಾಗಿ ಆಯ್ಕೆಯಾದವರ ಪೈಕಿ ಮೂವರು ಈ ಹಿಂದೆಯೂ ಸಚಿವರಾಗಿದ್ದರು. ಈ ಹಿಂದಿನ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಶೋಭಾ ಕರಾಂದ್ಲಾಜೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿ ಪ್ರಹ್ಲಾದ ಜೋಶಿ ಇದ್ದರು. ಈಗ ಮತ್ತೆ ಅವರನ್ನೇ ಸಚಿವ ಸಂಪುಟದಲ್ಲಿ ಮುಂದುವರಿಸಲಾಗಿದೆ.
ಇನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದಾರೆ. ಅವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಅವರನ್ನೂ ಮೀರಿ ವಿ.ಸೋಮಣ್ಣ ಅಚ್ಚರಿಯ ರೀತಿಯಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ
“ನನಗೆ ಕೇಂದ್ರ ಸಚಿವನಾಗುವ ಅವಕಾಶ ಸಿಕ್ಕಿದೆ. ಪ್ರಧಾನಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಕರ್ನಾಟಕದ 5 ಜನರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ” ಎಂದು ದೆಹಲಿಯಲ್ಲಿ ಮಾತನಾಡಿದ ಸೋಮಣ್ಣ ಹೇಳಿದ್ದಾರೆ.
ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಹಲವು ಸಂಸದರು ಸಚಿವರಾಗಿ ಸಂಪುಟ ಸೇರಲಿದ್ದಾರೆ.




