- ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು
- ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ
ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಲಹೆ ಆಧರಿಸಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೂಚನೆ ನೀಡಿದರು.
ವಿಕಾಸಸೌಧದಲ್ಲಿ ಗುರುವಾರ ರೇಬಿಸ್ ನಿರ್ಮೂಲನೆಗಾಗಿ ರಚಿಸಿರುವ ಜಂಟಿ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ರೇಬಿಸ್ ನಿರ್ಮೂಲನೆಗಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸುವ ಸಮಿತಿಗಳಲ್ಲಿನ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ತಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು” ಎಂದರು.
“ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಅರಣ್ಯ ಇಲಾಖೆಗಳು, ವನ್ಯಜೀವಿ ಸಂರಕ್ಷಣಾ ಮಂಡಳಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಮನ್ವಯದೊಂದಿಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿಗಳ ತಜ್ಞರು ಕೂಡ ಈ ಕ್ರಿಯಾಯೋಜನೆಯ ಭಾಗವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು” ಎಂದು ಹೇಳಿದರು.
“ಬೆಂಗಳೂರು ಮಹಾನಗರದಲ್ಲಿ ಬೀದಿನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ (Anti Rabies Vaccine) ಆಂದೋಲನ ಕೈಗೊಳ್ಳಲು ಬಿಬಿಎಂಪಿಯ ಪಶುಸಂಗೋಪನೆ ವಿಭಾಗಕ್ಕೆ ತ್ವರಿತವಾಗಿ 2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು” ಎಂದು ಸೂಚಿಸಿದರು.
“ಸಮೀಕ್ಷಾ ಕಾರ್ಯ ಮತ್ತು ಪ್ರಕರಣಗಳ ಸರಿಯಾದ ವರದಿಯಾಗಲು ರಾಷ್ಟ್ರೀಯ ಮಾರ್ಗಸೂಚಿಗಳ ಪ್ರಕಾರ ವಿವಿಧ ಹಂತಗಳ ವೈದ್ಯಕೀಯ, ಆರೋಗ್ಯ ಸಿಬ್ಬಂದಿಗೆ ತರಬೇತಿ ಆಯೋಜಿಸಬೇಕು. ನಾಯಿಕಡಿತದ ಪ್ರಕರಣಗಳ ನಿರ್ವಹಣೆಗೆ ಅಗತ್ಯವಿರುವ ರೇಬಿಸ್ ನಿರೋಧಕ ಲಸಿಕೆ, ರೇಬಿಸ್ ಇಮ್ಯುನೊಗ್ಲಾಬ್ಯುಲಿನ್ ಎಲ್ಲ ಕಡೆ ಲಭ್ಯವಿರುವಂತೆ ನೋಡಿಕೊಳ್ಳಬೇಕು, ಘನತ್ಯಾಜ್ಯ ವಿಲೇವಾರಿ ಕುರಿತು ನಿರಂತರವಾಗಿ ಜನಜಾಗೃತಿ ಮೂಡಿಸಲು ಸಂಬಂಧಿತ ಎಲ್ಲಾ ಇಲಾಖೆಗಳ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯಪ್ರವೃತ್ತರಾಗಬೇಕು. ನಿರ್ದಿಷ್ಟ ಗುರಿಗಳನ್ನು ಹಾಕಿಕೊಂಡು 2030 ರೊಳಗೆ ರೇಬಿಸ್ ನಿರ್ಮೂಲನೆಗೆ ಆಂದೋಲನದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು” ಎಂದು ಶಾಲಿನಿ ರಜನೀಶ್ ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಾತನಾಡಿ, “ಕೆಎಫ್ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚು ವರದಿಯಾಗುವ ಜಿಲ್ಲೆಗಳ ತುಲನಾತ್ಮಕ ಅಧ್ಯಯನ ಮಾಡಿ ನಿಖರವಾದ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು. ವಿವಿಧ ಪ್ರದೇಶಗಳ ಭೂಮಿಯ ಮಣ್ಣು ಹಾಗೂ ವಾತಾವರಣಕ್ಕೆ ಅನುಗುಣವಾಗಿ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು” ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ್, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.




