ಸರ್ಕಾರದಲ್ಲಿ ಚರ್ಚಿಸಿ ಗಂಡು ಮಕ್ಕಳಿಗೂ ಒಂದು ವಯೋಮಿತಿಯವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಚರಣ್, “ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ ಎಂದು ಪ್ರಶ್ನಿದಾಗ ಡಿ ಕೆ ಶಿವಕುಮಾರ್ ಉತ್ತರಿಸಿದರು.
ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು”ಎಂದರು.
“ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ, ವಿಧಾನಸೌಧನ ಸಮ್ಮೇಳನ ಸಭಾಂಗಣವು ರಾಜ್ಯದ 7-8 ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಿದ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು” ಎಂದು ಸಲಹೆ ನೀಡಿದರು.
2 ಸಾವಿರ ಸಿಎಸ್ಆರ್ ಶಾಲೆಗಳ ಸ್ಥಾಪನೆ
ಹೇರೋಹಳ್ಳಿ ಪಾಲಿಕೆ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಶಾಲಿನಿ ಬಿ.ಆರ್, ಗ್ರಾಮೀಣ ಭಾಗದಲ್ಲಿ ಪ್ರೌಢಶಾಲೆಗಳ ಕೊರತೆ ಇದೆ ಎಂದು ಕೇಳಿದಾಗ, “ಸರ್ಕಾರದಿಂದ ಹೊಸ ಯೋಜನೆ ಜಾರಿ ಮಾಡಲಾಗುತ್ತಿದ್ದು, 3 ಎಕರೆ ಪ್ರದೇಶದಲ್ಲಿ 2000 ಕಡೆ ಶಾಲೆ ನಿರ್ಮಾಣ ಮಾಡಲು ಮುಂದಾಗುತ್ತಿದೆ. ಅದನ್ನು ಖಾಸಗಿ ಶಾಲೆಗಳು ದತ್ತು ಪಡೆದುಕೊಳ್ಳಬೇಕು. ನಗರದಲ್ಲಿ ಬಂದು ವಿದ್ಯಾಭಾಸ ಪಡೆಯುವುದನ್ನು ತಪ್ಪಿಸಿ ಗ್ರಾಮೀಣ ಪ್ರದೇಶದಲ್ಲಿಯೇ ಶಾಲೆ ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು
ಸರ್ಕಾರಿ ಶಾಲೆ ಶಿಕ್ಷಕರ ಗುಣಮಟ್ಟ ಹೆಚ್ಚಿಸಲು ಕ್ರಮ
ಮಾರುತಿ ಮಂದಿರದ ಪ್ರಾಥಮಿಕ ಪಾಠಶಾಲೆ 5ನೇ ತರಗತಿ ವಿದ್ಯಾರ್ಥಿ ಹರ್ಷ, ದೊಡ್ಡ ದೊಡ್ಡ ಪ್ರೈವೇಟ್ ಸ್ಕೂಲ್ಗಳಂತೆ ನಮ್ಮ ಬಿಬಿಎಂಪಿ ಶಾಲೆಗಳಲ್ಲಿ ಕ್ವಾಲಿಟಿ ಎಜುಕೇಷನ್ ನೀಡಲು ಯೋಜನೆ ಇದಿಯಾ ಎಂದು ಕೇಳಿದಾಗ, “ರಾಜ್ಯದಲ್ಲಿ ಸರ್ಕಾರಿ, ಪಾಲಿಕೆ ಸೇರಿ ಸುಮಾರು 46,000 ಶಾಲೆಗಳಿದ್ದು, ಎಲ್ಲರಿಗೂ ಗುಣಮಟ್ಟ ಶಿಕ್ಷಣ ನೀಡುವುದು ಸರ್ಕಾರದ ಚಿಂತನೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಕ್ವಾಲಿಟಿ ಎಜುಕೇಷನ್ ನೀಡುತ್ತಿದ್ದಾರೆ. ಯಾರ ಪ್ರಭಾವಕ್ಕೂ ಒಳಗಾಗದೆ ಮೆರಿಟ್ ಮೇಲೆ ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತಿದೆ. ಶಿಕ್ಷಕರಿಗೆ ಹೊಸ ಸ್ಕೀಮ್ ತರಲಾಗುತ್ತಿದ್ದು, ಸಿಬಿಎಸ್ಸಿ, ಐಸಿಎಸ್ಸಿ ಶಿಕ್ಷಣ ನೀಡುವ ಹಾಗೆ ಸರ್ಕಾರಿ ಶಾಲೆಗಳನ್ನು ಹೊಸ ವ್ಯವಸ್ಥೆ ಜಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಈ ಬಾರಿ ಎಸ್.ಎಸ್.ಎಲ್.ಸಿ.ಯಲ್ಲಿ ಬಾಗಲಕೋಟೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೊದಲ ರ್ಯಾಂಕ್ ಬಂದಿದ್ದು, ಅದರಿಂದಲೇ ನಾವು ಯಾವ ರೀತಿಯ ಶಿಕ್ಷಣ ಸಿಗಲಿದೆ ಎಂಬುದನ್ನು ಗಮನಿಸಬಹುದಾಗಿದೆ. ಶ್ರಮ ಎಲ್ಲಿದಿಯೋ ಅಲ್ಲಿ ಫಲವಿರುತ್ತದೆ” ಎಂದು ತಿಳಿಸಿದರು.
ಮಾಲಿನ್ಯ ತಡೆಯಲು ಅಗತ್ಯ ಕ್ರಮ
ವಿಜಯನಗರದ ಪಾಲಿಕೆ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿ ಅಜಿತ್ ಎಂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ವರ್ಷ ತುಂಬಾ ಮಾಲಿನ್ಯ ಉಂಟಾಗುತ್ತಿದೆ, ಬೆಂಗಳೂರು ನಗರ ಕೂಡ ಅನಿಯಮಿತ ಮಳೆ, ಬರ, ನೀರಿನ ಕೊರತೆಯನ್ನು ಎದುರಿಸುತ್ತಿದೆ. ನಮ್ಮ ನಗರವನ್ನು ಉಳಿಸಲು ಏನು ಕ್ರಮ ಕೈಗೊಳ್ಳುತ್ತಿರಾ? ಎಂದು ಕೇಳಿದಾಗ, “ದೆಹಲಿ, ಹರಿಯಾಣ, ಪಂಜಾಬ್, ರಾಜಸ್ಥಾನ ಕಡೆ ಹೆಚ್ಚು ಗೋಧಿ ಬೆಳೆಯುತ್ತಾರೆ, ಆ ಹುಲ್ಲನ್ನು ಉಪಯೋಗಿಸಲು ಸಾಧ್ಯವಾಗದ ಕಾರಣ ಸುಡುತ್ತಿದ್ದಾರೆ. ಆದ್ದರಿಂದ ವಾಯು ಮಾಲಿನ್ಯ ಹೆಚ್ಚುತ್ತಿದೆ. ನಮ್ಮಲ್ಲಿ ಆ ರೀತಿಯ ಸಮಸ್ಯೆ ಇಲ್ಲ, ವಾಹನಗಳ ಮಾಲಿನ್ಯ ಅಷ್ಟೇ ಇದ್ದು, ಕಾರ್ಖಾನೆಗಳನ್ನು ಕೂಡಾ ಹೊರ ಭಾಗದಲ್ಲಿ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುತ್ತಿದೆ. ನಗರದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ, ನಮ್ಮ ನಾಗರೀಕರೀಕರು ಸಹ ಪರಿಸರ ಸ್ನೇಹಿ ವಾಹನಗಳಿಗೆ ಬದಲಾಗಬೇಕು. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು” ಎಂದರು.
ರಾಜ್ಯದಾದ್ಯಂತ ಒಂದೇ ಗುಣಮಟ್ಟದ ಶಿಕ್ಷಣ
ಮತ್ತಿಕೆರೆಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮಹೇಶ್ವರಿ, ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪೋಷಕರು ಬೇರೆ ಊರುಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದೆಬರುವುದಿಲ್ಲ ಎಂದು ಕೇಳಿದಾಗ, “ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕಲ್ಯಾಣ ಕರ್ನಾಟಕ ಆಗಲಿ, ಇಡೀ ರಾಜ್ಯ ಒಂದೇ, ಎಲ್ಲಾ ಕಡೆ ಒಂದೇ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನೀವು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಧೈರ್ಯ ತುಂಬಿದರು.





