- ‘ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್’ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ
- ‘ಒಂದು ಪಕ್ಷದವರು ಬಂದ್ ವದಂತಿ ಹರಡಿಸುತ್ತಿದ್ದಾರೆ’ ಎಂದ ಸಚಿವ ರಾಮಲಿಂಗಾ ರೆಡ್ಡಿ
ಮಹಿಳೆಯರಿಗೆ ಈಗಾಗಲೇ ನೀಡಲಾಗಿರುವ ಗ್ಯಾರಂಟಿಗಳ ಪೈಕಿ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ’ಯು ಇನ್ನೂ ಹತ್ತು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
‘ಶಕ್ತಿ ಯೋಜನೆ ನಿಲ್ಲಿಸಲಾಗುತ್ತೆಂದು ಸುಳ್ಳು ಸುದ್ದಿ’ಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇದು ವದಂತಿಯಷ್ಟೇ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ, 10 ವರ್ಷಗಳ ಕಾಲ ಶಕ್ತಿ ಯೋಜನೆ ಮುಂದುವರಿಯುತ್ತದೆ. ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ನಮ್ಮ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಕೆಲವರು ಬಸ್ ಪಾಸ್ ಕೊಡಿ ಎಂದು ಅಧಿಕಾರಿಗಳಲ್ಲಿ ಕೇಳುತ್ತಿದ್ದಾರೆ ಅಂತ ಮಾಹಿತಿ ಬಂದಿದೆ. ಇದು ವದಂತಿಯಷ್ಟೇ. ಮುಂದಿನ ಬಾರಿ ಅಧಿಕಾರಕ್ಕೆ ಬರುವುದರ ಜೊತೆಗೆ 10 ವರ್ಷಗಳ ಕಾಲವೂ ಮುಂದುವರಿಯುತ್ತದೆ. ಹಾಗಾಗಿ, ಹೆಣ್ಣುಮಕ್ಕಳು ಯಾರೂ ಬಸ್ ಪಾಸ್ ಪಡೆಯುವ ಅಗತ್ಯವಿಲ್ಲ. ವದಂತಿಗಳನ್ನು ನಂಬಬೇಡಿ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟೀಕರಣ ನೀಡಿದರು.
ಈ ನಡುವೆ ಕೆಎಸ್ಆರ್ಟಿಸಿ ಕೂಡ ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ’ ಎಂದು ಸ್ಪಷ್ಟಪಡಿಸಿದೆ.





