ಐದು ಪಾಲಿಕೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲು ಬೆಂಗಳೂರಿನ ಆರು ಸಚಿವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ದೋಸ್ತಿ ನಾಯಕರು ಜಿಬಿಎ ಪಾಲಿಟಿಕ್ಸ್ಗೆ ಪ್ಲ್ಯಾನ್ ರೆಡಿ ಮಾಡುತ್ತಿದ್ದಾರೆ. ಮೈತ್ರಿಯಲ್ಲಿ ಎರಡು ಸಮನ್ವಯ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೆರೆಗೆ ಸರಿದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದ ಬಳಿಕ ಅದಕ್ಕೆ ಚುನಾವಣೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಜ್ಜಾಗುತ್ತಿದೆ. ಜಿಬಿಎ ಚುನಾವಣೆ ಅಧಿಕೃತವಾಗಿ ಘೋಷಣೆಯಾದಿದ್ದರೂ ಆಡಳಿತರೂಢ ಕಾಂಗ್ರೆಸ್ ಪಕ್ಷವು ತಳಮಟ್ಟದಲ್ಲಿ ಸಿದ್ಧತೆ ಪ್ರಾರಂಭಿಸಿದೆ. ಅತ್ತ ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಹ ಜಿಬಿಎ ಚುನಾವಣೆಗೆ ಸಮನ್ವಯ ಸಮಿತಿ ರಚಿಸಿಕೊಂಡಿವೆ.
18 ವರ್ಷಗಳ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಯುಗಾಂತ್ಯಗೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರವು ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಜಿಬಿಎ ಆಡಳಿತ ಪರ್ವ ಆರಂಭಗೊಂಡಿದೆ. ಐದು ಪಾಲಿಕೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲು ಬೆಂಗಳೂರಿನ ಆರು ಸಚಿವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಹೊಣೆ ನೀಡಲಾಗಿದೆ.
ಪ್ರತಿ ಪಾಲಿಕೆಯಲ್ಲಿ ಚುನಾವಣೆ ತಯಾರಿ ಚುರುಕುಗೊಳಿಸಲು ಸಚಿವರಿಗೆ ಉಸ್ತುವಾರಿ ನೀಡಲಾಗಿದೆ. ಚುನಾವಣೆ ಘೋಷಣೆಗೂ ಮುನ್ನವೇ ಈ ಆರು ಸಚಿವರಿಗೆ ಜವಾಬ್ದಾರಿ ಹಂಚಿರುವುದು ನೋಡಿದರೆ ಗೆಲುವಿನ ಟಾಸ್ಕ್ ಅನ್ನು ಸರ್ಕಾರ ಗಂಭೀರವಾಗಿಯೇ ಪರಿಗಣಿಸಿದಂತೆ ಕಾಣುತ್ತಿದೆ. ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವುದರಿಂದ ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಸಹಜವಾಗಿಯೇ ಬಲಿಷ್ಠವಾಗಿದೆ.
ವಿಪರ್ಯಾಸದ ಸಂಗತಿ ಎಂದರೆ ಬೆಂಗಳೂರು ಉಸ್ತುವಾರಿಯಾಗಿದ್ದರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಿಬಿಎ ಚುನಾವಣೆಯ ಹೊಣೆ ನೀಡಿಲ್ಲ. ಆದರೂ, ಡಿ.ಕೆ.ಶಿವಕುಮಾರ್ ಹಿಡಿತದಲ್ಲಿಯೇ ಜಿಬಿಎ ಚುನಾವಣೆ ನಡೆಯುತ್ತದೆ ಎನ್ನುವ ಮಾತುಗಳು ಹೆಚ್ಚು ಕೇಳಿಬರುತ್ತಿವೆ. ಹೀಗಾಗಿ ಬೆಂಗಳೂರಿನ ಸಚಿವರು ತಮಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು, ಇದರಿಂದ ಹೆಚ್ಚಿನ ಸ್ಥಾನ ಗೆಲ್ಲಲು ಸಹಾಯವಾಗುತ್ತದೆ, ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪ ಇರಬಾರದು ಎಂಬ ಮನವಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಡಿದ್ದಾರೆ ಎನ್ನಲಾಗಿದೆ.
ಒಟ್ಟಾರೆ ಈಗಿನಿಂದಲೇ ಚುನಾವಣೆ ಕಾರ್ಯವನ್ನು ಆರಂಭಿಸಿ ಪ್ರತಿ ಮನೆಯನ್ನು ತಲುಪುವುದು ಮೂರು ಪಕ್ಷಗಳ ಲೆಕ್ಕಾಚಾರ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಸರ್ಕಾರ ಸಚಿವರಿಗೆ ಉಸ್ತುವಾರಿ ನೀಡಿದೆ. ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.

ಮೈತ್ರಿ ಪಕ್ಷಗಳಿಂದ ತಯಾರಿ ಹೇಗಿದೆ?
ದೋಸ್ತಿ ನಾಯಕರು ಜಿಬಿಎ ಪಾಲಿಟಿಕ್ಸ್ಗೆ ಪ್ಲ್ಯಾನ್ ರೆಡಿ ಮಾಡುತ್ತಿದ್ದಾರೆ. ಮೈತ್ರಿಯಲ್ಲಿ ಎರಡು ಸಮನ್ವಯ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯಕ್ಕೊಂದು ಮತ್ತು ಬೆಂಗಳೂರಿಗೊಂದು ಎಂಬಂತೆ ಎರಡೆರಡು ಸಮಿತಿ ರಚಿಸಲು ತೀರ್ಮಾನ ಮಾಡಿದ್ದಾರೆ. ಆದರೆ ರಾಜ್ಯ ನಾಯಕರು ಎಷ್ಟೇ ಪ್ಲ್ಯಾನ್ ಮಾಡಿದರೂ ಕೊನೆಗೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಒಳ ತೀರ್ಮಾನವೇ ಅಂತಿಮ. ಹೀಗಾಗಿ ಈ ಇಬ್ಬರ ಮುಖಂಡರ ಸೂಚನೆ ಮೇರೆಗೆ ರಾಜ್ಯ ನಾಯಕರು ಕಾರ್ಯನಿರ್ವಹಿಸಲಿದ್ದು, ಜಿಬಿಎ ಚುನಾವಣೆಗೆ ಸೀಟು ಹಂಚಿಕೊಂಡು ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ.
ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯವ ಚುನಾವಣೆ ಸಂಬಂಧ ಬಿಜೆಪಿ ಗುರುವಾರ (ಅ.23) ಸಂಯೋಜಕರ ತಂಡವನ್ನು ರಚಿಸಿದೆ. ತಂಡದಲ್ಲಿ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಎಸ್.ಸುರೇಶ್ಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಡಾ.ಕೆ.ಸುಧಾಕರ್ ಹಾಗೂ ಎನ್.ಎಸ್.ನಂದೀಶ್ ರೆಡ್ಡಿ ಇದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಿಗೆ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರಕ್ಕೆ ಎಸ್.ಹರೀಶ್ ಹಾಗೂ ಬೆಂಗಳೂರು ಕೇಂದ್ರಕ್ಕೆ ಎ.ಆರ್. ಸಪ್ತಗಿರಿಗೌಡ ಅವರು ಸಂಘಟನಾತ್ಮಕ ಉಸ್ತುವಾರಿಗಳಾಗಿದ್ದಾರೆ.
ಪಾಲಿಕೆ ವಿಚಾರವಾಗಿ ಬೆಂಗಳೂರು ಪೂರ್ವಕ್ಕೆ ಎಂ.ಟಿ.ಬಿ.ನಾಗರಾಜ್, ಕೆ.ಎಸ್.ನವೀನ್, ಬೆಂಗಳೂರು ಉತ್ತರಕ್ಕೆ ಮುನಿರತ್ನ, ಭಾರತಿಶೆಟ್ಟಿ, ಬೆಂಗಳೂರು ದಕ್ಷಿಣಕ್ಕೆ ಬಿ.ಎ.ಬಸವರಾಜ್, ಎನ್.ರವಿಕುಮಾರ್, ಬೆಂಗಳೂರು ಕೇಂದ್ರಕ್ಕೆ ಡಾ.ಸಿ.ಎನ್. ಅಶ್ವತ್ಥನಾರಾಯಣ, ಡಿ.ಎಸ್.ಅರುಣ್ ಹಾಗೂ ಬೆಂಗಳೂರು ಪಶ್ಚಿಮಕ್ಕೆ ಕೆ.ಗೋಪಾಲಯ್ಯ, ಎ.ನಾರಾಯಣ ಸ್ವಾಮಿ, ಅಶ್ವತ್ಥನಾರಾಯಣ ಉಸ್ತುವಾರಿಗಳಾಗಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿ ರಚನೆಯಾಗಿರುವ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಚುನಾವಣಾ ಆಯೋಗ ಅ.14ರಂದು ಆದೇಶ ಹೊರಡಿಸಿದೆ. ಆ ಮೂಲಕ ಸದ್ಯದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ದಿನಾಂಕ ಕೂಡ ಘೋಷಣೆಯಾಗುವ ಸಾಧ್ಯತೆ ಇದೆ.

ಆರಂಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯನ್ನು ಪದೆಪದೇ ಮುಂದೂಡಿಕೊಂಡೇ ಬರಲಾಗಿದೆ. ಬಿಬಿಎಂಪಿ ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015 ರಲ್ಲಿ ನಡೆದಿತ್ತು. ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು 2019ರ ಸೆಪ್ಟೆಂಬರ್ 10ರಂದು ಪೂರ್ಣಗೊಂಡು, ಆರು ವರ್ಷವಾದರೂ ಚುನಾವಣೆ ನಡೆದಿಲ್ಲ. 2019ರಲ್ಲೇ ಆರು ವಾರಗಳಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು. ಕಾರಣ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ- 2020ಕ್ಕೆ ತಿದ್ದುಪಡಿ 198 ವಾರ್ಡ್ಗಳಿಂದ 243 ವಾರ್ಡ್ಗಳಿಗೆ ವಿಸ್ತರಿಸಿದ್ದರು.
ಬಿಬಿಎಂಪಿ ಚುನಾವಣೆ ನಡೆಸದೇ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಹಲವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲೂ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ವಿಚಾರಣೆಗಳು ನಡೆಯುತ್ತಿವೆ. ಆದರೆ, ವಾರ್ಡ್ಗಳ ಪುನರ್ ವಿಂಗಡಣೆ, ವಾರ್ಡ್ವಾರು ಮೀಸಲಾತಿ ನಿಗದಿಯಂತಹ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಬಿಜೆಪಿ ಸರ್ಕಾರವು ನ್ಯಾಯಾಲಯದಲ್ಲಿ ಪಾರಾಗುತ್ತಲೇ ಬಂತು.
2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಪಾಲಿಕೆಗೆ ಚುನಾವಣೆ ನಡೆಸಬೇಕೆಂಬ ಒತ್ತಡ ಹೆಚ್ಚಾಗಿತ್ತು. ಆಗ, ಸರ್ಕಾರವು ಬೆಂಗಳೂರಿನ ಸ್ಥಳೀಯ ಆಡಳಿತ ನಿರ್ವಹಣೆಗೆ ಹೊಸದೊಂದು ಮಾದರಿಯನ್ನು ಪ್ರಸ್ತಾಪಿಸಿತು. ಈಗ ಬಿಬಿಎಂಪಿಯನ್ನು ಹಲವು ಪಾಲಿಕೆಗಳನ್ನಾಗಿ ವಿಭಜಿಸಿ, ಆಡಳಿತಕ್ಕೆ ಹೊಸ ಸ್ವರೂಪ ನೀಡುವ ಮತ್ತು ಪಾಲಿಕೆಯ ಭೌಗೋಳಿಕ ವ್ಯಾಪ್ತಿಯನ್ನು ವಿಸ್ತರಿಸುವ ಪ್ರಸ್ತಾವವುಳ್ಳ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024’ ಜಾರಿಗೆ ತಂದಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಐದು ನಗರ ಪಾಲಿಕೆ ರಚಿಸಿ, ಒಟ್ಟು 368 ವಾರ್ಡ್ಗಳನ್ನು ವಿಂಗಡಣೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ 63 ವಾರ್ಡ್ಗಳು, ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ 72 ವಾರ್ಡ್ಗಳು, ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ 50 ವಾರ್ಡ್ಗಳು, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ 111 ವಾರ್ಡ್ಗಳು ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ 72 ವಾರ್ಡ್ಗಳನ್ನು ಮರುವಿಂಗಡಣೆ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ರೂಪಿಸಿ ಜಾರಿಗೆ ತರುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ನಲ್ಲಿ ನಿರ್ದೇಶನ ನೀಡಿದೆ. ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಈಗಾಗಲೇ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಈ ಎಲ್ಲ ಬೆಳವಣಿಗೆ ನೋಡಿದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆ 2026ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮುಂಬರುವ 2028 ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಹೀಗಾಗಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಸೆಳೆಯಲು ಆಡಳಿತಾರೂಢ ಪಕ್ಷ ಮತ್ತು ಪ್ರತಿಪಕ್ಷದ ಆಕಾಂಕ್ಷಿಗಳು ಕಸರತ್ತಿಗೆ ಸಜ್ಜಾಗುತ್ತಿದ್ದಾರೆ.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.




