- ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ
- ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಎ3 ಆರೋಪಿ
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಮಾಡಿರುವ ವಂಚನೆ ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಸೆ.19ಕ್ಕೆ ಮುಂದೂಡಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಎ3 ಆರೋಪಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ, ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರಿಗೆ ಸೆ.19ರವರೆಗೆ ಅವಕಾಶ ಕಲ್ಪಿಸಿದೆ.
ಅಭಿನವ ಹಾಲಶ್ರೀ ಸಿಸಿಎಚ್-57ನೇ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಸೆ.14ರಂದು ಅರ್ಜಿ ಸಲ್ಲಿಸಿದ್ದರು. ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯವು ಸೂಚನೆ ನೀಡಿ, ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೂಡ ನ್ಯಾಯಾಲಯದ ಮೆಟ್ಟಿಲೇರಿದ್ದು, ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಯಾವುದೇ ಸುಳಿವಿಲ್ಲದಂತೆ ತಲೆಮರೆಸಿಕೊಂಡಿದ್ದಾರೆ. ಸ್ವಾಮೀಜಿಯನ್ನು ಪತ್ತೆ ಹಚ್ಚಲು ಸಿಸಿಬಿ ಪೊಲೀಸರು ಶೋಧ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದಾರೆ.
ಸ್ವಾಮೀಜಿಯ ಮನೆ ಹಾಗೂ ಹಿರೇಹಡಗಲಿಯ ಮಠದಲ್ಲಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಅಲ್ಲದೇ ಹಾಲಶ್ರೀ ಮನೆ ಮತ್ತು ಮಠದ ಸಿಸಿಟಿವಿ ಡಿವಿಆರ್ನ್ನು ಸಿಸಿಬಿ ವಶಕ್ಕೆ ಪಡೆದಿದೆ. ಅಷ್ಟೇ ಅಲ್ಲದೇ ಆರೋಪಿಯ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದಕ್ಕಾಗಿ ಹರಪನಹಳ್ಳಿ ಹಾಗೂ ದಾವಣಗೆರೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಹಲವು ಕಡೆ ಪರಿಶೀಲನೆ ನಡೆಸಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಅವರ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಈ ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಅಭಿನವ ಹಾಲಶ್ರೀ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧ ಕಳೆದ ಆಗಸ್ಟ್ 11ರಂದು ಬೆಂಗಳೂರಿನ ರಾಜರಾಜೇಶ್ವರಿನಗರದ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸ್ವಾಮೀಜಿ ವಿಚಾರವಾಗಿ ಈಗಾಗಲೇ ಬಂಧನವಾಗಿರುವ ಎ1 ಆರೋಪಿ ಚೈತ್ರಾ ಕುಂದಾಪುರ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವಾಗ, ಸ್ವಾಮೀಜಿ ಬಂಧನವಾದ ಬಳಿಕ ದೊಡ್ಡವರ ಹೆಸರು ಹೊರ ಬರಲಿದೆ ಎಂದು ಹೇಳಿಕೆ ನೀಡಿದ್ದಳು. ಈ ಹೇಳಿಕೆಯ ಬಳಿಕ ಪ್ರಕರಣ ರಾಜ್ಯ ರಾಜಕೀಯದಲ್ಲೂ ಬಹಳಷ್ಟು ಸಂಚಲನವನ್ನೂ ಮೂಡಿಸಿದೆ.





