ವಿವಾದಾತ್ಮಕ ಹೇಳಿಕೆ ನೀಡಿ ಬಂಧನ ಭೀತಿ ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಎಫ್ಐಆರ್ ರದ್ದು ಕೋರಿ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಾದಗಳನ್ನು ಆಲಿಸಿ ಸಿ.ಕೆ. ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ.
ಉಪೇಂದ್ರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಗಾದೆ ಮಾತನ್ನು ಉಲ್ಲೇಖಿಸಿ ಹೇಳಿಕೆಯನ್ನು ನೀಡಿದ್ದಾರಷ್ಟೇ. ಯಾರನ್ನೂ ಅವಹೇಳನ ಮಾಡುವ ಅಥವಾ ಉದ್ದೇಶಪೂರ್ವಕವಾಗಿ ಮಾತನ್ನು ಹೇಳಿರಲಿಲ್ಲ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್, ‘ಗಾದೆ ಮಾತನ್ನು ಉಲ್ಲೇಖಿಸಿದ್ದಕ್ಕೆ ಇಷ್ಟೆಲ್ಲಾ ಎಫ್ಐಆರ್ ಯಾಕೆ’ ಎಂದು ಪ್ರಶ್ನಿಸಿದರು. ಬಳಿಕ ಸಿ.ಕೆ. ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.
ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಆ ಬಳಿಕ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಎರಡು ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದ್ದವು. ಮೊದಲ ಎಫ್ಐಆರ್ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಆಗಿದ್ದರೆ, ಎರಡನೇ ಎಫ್ಐಆರ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ನಾನು ದಾಖಲಿಸಿರುವ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿಲ್ಲ : ಭೈರಪ್ಪ ಹರೀಶ್ ಕುಮಾರ್
ಉಪೇಂದ್ರ ಅವರಿಗೆ ಹೈಕೋರ್ಟ್ ತಡೆಯಾಜ್ಞೆಯ ಸುದ್ದಿಯ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದ ದೂರುದಾರ ಭೈರಪ್ಪ ಹರೀಶ್ ಕುಮಾರ್ ಸ್ಪಷ್ಟೀಕರಣ ನೀಡಿದ್ದು, ‘ನಾನು ದಾಖಲಿಸಿರುವ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿಲ್ಲ’ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಾನು ದಾಖಲಿಸಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಾಖಲಿಸಿರುವ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಎಫ್ಐಆರ್ಗೆ ಮಾತ್ರ ತಡೆಯಾಜ್ಞೆ ನೀಡಿದೆ. ಹಾಗಾಗಿ ಯಾರೂ ಗೊಂದಲಕ್ಕೆ ಒಳಗಾಗಬಾರದು. ಉಪೇಂದ್ರನನ್ನು ಬಂಧಿಸಲು ಇನ್ನೂ ಅವಕಾಶ ಇದೆ. ಬಂಧಿಸಬೇಕು ಎಂಬ ಆಗ್ರಹವನ್ನು ಜಾರಿಯಲ್ಲಿಡೋಣ’ ಎಂದಿದ್ದಾರೆ.





