ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದಲ್ಲಿ ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸೋಮೋಟೊ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಪಂಪ್ವೆಲ್ಗೆ ದ.ಕ. ಜಿಲ್ಲೆ ಬಿಟ್ಟು ಹೊರಹೋಗದಂತೆ ಷರತ್ತು ವಿಧಿಸಲಾಗಿತ್ತು. ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸುವ ಸಾಧ್ಯತೆಯನ್ನು ಅರಿತ ಪಂಪ್ವೆಲ್, ಉಡುಪಿ-ಮಂಗಳೂರು ಗಡಿಭಾಗವಾದ ಹೆಜಮಾಡಿಯಿಂದಲೇ ಮಂಗಳೂರಿಗೆ ವಾಪಸ್ ತೆರಳಿದ್ದಾರೆಂದು ತಿಳಿದುಬಂದಿದೆ.





