ನೀಟ್ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅದಾಗ್ಯೂ, ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ನಿಲುವನ್ನು ವಿವರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಪ್ರಶ್ನೆಪತ್ರಿಕೆ ಸೋರಿಕೆಯು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಆದರೆ, ನೀಟ್ಅನ್ನು ರದ್ದುಗೊಳಿಸಿದರೆ, ನ್ಯಾಯವಾಗಿ ಪರೀಕ್ಷೆ ಬರೆದು, ಉತ್ತೀರ್ಣರಾದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದಿದ್ದಾರೆ.
2004 ಮತ್ತು 2015ರಲ್ಲಿಯು ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಆದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕೆಲ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಪರೀಕ್ಷೆಯನ್ನು ರದ್ದುಗೊಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದ್ದು, ನ್ಯಾಯಾಲಯವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸರ್ಕಾರ ಬದ್ದವಾಗಿರುತ್ತದೆ ಎಂದು ಅವರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರಗಳು ಮತ್ತು ಅಕ್ರಮಗಳನ್ನು ತಡೆಯಲು ಕಠಿಣ ಕಾನೂನುಗಳ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿದೆ. ಆಪಾದಿತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅವ್ಯವಹಾರಗಳ ಬಗ್ಗೆ ಚರ್ಚೆಗಳು, ಪ್ರತಿಭಟನೆಗಳು ನಡೆಯುತ್ತಿರುವ ಹಾಗೂ ನೆಟ್ ಪರೀಕ್ಷೆ ರದ್ದಾಗಿರುವ ಸಮಯದಲ್ಲಿ ಅಧಿಸೂಚನೆ ಹೊರಬಂದಿದೆ.




