ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಕೊಡದೆ, ಅವರನ್ನು ರಕ್ಷಿಸಲು ಮುಂದಾಗಿದ್ದ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ವಿಜಯ್ ಶಾ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವ ಕುರಿತು ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. ಇನ್ನು, ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ, ಭೋಪಾಲ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ವಿಜಯ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.
ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ದಾಳಿ ಮತ್ತು ಅದರ ವಿರುದ್ಧ ಆಪರೇಷನ್ ಸಿಂಧೂರ ಕುರಿತು ಮಾತನಾಡಿದ್ದ ವಿಜಯ್ ಶಾ ನಾಲಿಗೆ ಹರಿಬಿಟ್ಟಿದ್ದರು. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ಹಿಸಿದ್ದ ಸೋಫಿಯಾ ಅವರನ್ನು ಉಲ್ಲೇಖಿಸಿ, ‘ನಮ್ಮ ಮಗಳನ್ನು ವಿಧವೆಯರನ್ನಾಗಿ ಮಾಡಿದವರಿಗೆ, ನಾವು ಅವರದ್ದೇ ಸಹೋದರಿಯನ್ನು ಕಳುಹಿಸಿ ಪಾಠ ಕಲಿಸಿದ್ದೇವೆ’ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು. ವಿಜಯ್ ಶಾ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಬಳಿಕ, ವಿಜಯ್ ಶಾ ಹೇಳಿಕೆ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ರಚಿಸಿದ್ದ ಸಮಿತಿಯು, ತನಿಖೆ ನಡೆಸಿ ನ್ಯಾಯಾಯಕ್ಕೆ ವರದಿ ಸಲ್ಲಿಸಿತ್ತು. ಆದರೆ, ರಾಜ್ಯ ಸರ್ಕಾರವು ವಿಜಯ್ ಶಾ ವಿರುದ್ಧ ಕ್ರಮ ಕೈಗೊಳ್ಳಲು ಇನ್ನೂ ಅನುಮತಿ ನೀಡಿಲ್ಲ. ಇದೇ ವಿಚಾರವಾಗಿ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, “ನೀವು 2025ರ ಆಗಸ್ಟ್ 19ರಿಂದ ಎಸ್ಐಟಿ ವರದಿಯನ್ನು ಪರಿಶೀಲಿಸುತ್ತಿದ್ದೀರಿ. ನಿಮ್ಮ ಮೇಲೆ ಕಾನೂನು ಬಾಧ್ಯತೆಗಳಿವೆ. ನೀವು ಇನ್ನೆರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ತಾಕೀತು ಮಾಡಿದೆ.
ಸುಪ್ರೀಂ ಕೋರ್ಟ್ ಆದೇಶದಂತೆವಿಜಯ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮಲ್ಲಿನ ವ್ಯಕ್ತಿಯೊಬ್ಬರಿಗೆ ವಿಜಯ್ ಶಾ ಅವರ ಮುಖವಾಡ ಹಾಕಿಸಿ, ಕೈಗೆ ಕೋಳ ತೊಡಿಸಿ ಮೆರವಣಿಗೆ ನಡೆಸಿದ್ದಾರೆ. ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಾಂಕೇತಿಕವಾಗಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಪೊಲೀಸರೇ ಕಾರಣ?
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಅಮಿತ್ ಶರ್ಮಾ, “ಶಾ ಅವರು ಕರ್ನಲ್ ಖುರೇಷಿ ಅವರನ್ನು ಅವಮಾನಿಸಿದ್ದಾರೆ. ಖುರೇಷಿ ದೇಶಕ್ಕೆ ಗೌರವ ತಂದ ರಾಷ್ಟ್ರದ ಪುತ್ರಿ. ಭಾರತೀಯ ಸೇನೆಯ ಮಹಿಳಾ ಅಧಿಕಾರಿಯನ್ನು ಅವಮಾನಿಸಿದ ಸಚಿವರನ್ನು ಸರ್ಕಾರ ರಕ್ಷಿಸುತ್ತಿದೆ. ವಿಜಯ್ ಶಾ ಅವರನ್ನು ತಕ್ಷಣವೇ ಅವರ ಹುದ್ದೆಯಿಂದ ತೆಗೆದುಹಾಕಬೇಕು” ಎಂದು ಆಗ್ರಹಿಸಿದ್ದಾರೆ.
“ಸುಪ್ರೀಂ ಕೋರ್ಟ್ನ ಆದೇಶವು ರಾಜ್ಯ ಸರ್ಕಾರಕ್ಕೆ ನೈತಿಕ ಮತ್ತು ರಾಜಕೀಯ ಸೋಲನ್ನು ಸೂಚಿಸುತ್ತದೆ. ಸುಪ್ರೀಂ ಕೋರ್ಟ್ನಲ್ಲಿ ಸತ್ಯ ಮೇಲುಗೈ ಸಾಧಿಸಿದೆ. ಸರ್ಕಾರವು ರಕ್ಷಿಸುತ್ತಿದ್ದ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ” ಎಂದು ಹೇಳಿದ್ದಾರೆ.




