“ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು. ಒಂದು ವೇಳೆ ಜನರಿಗೆ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದಿದ್ದರೆ ಸಹಿಸಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು(ಜೂನ್ 20) ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದರು.
ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ದೊರೆಯುವ ಅನುದಾನವನ್ನ ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ, ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚುರುಕು ಮುಟ್ಟಿಸಿದರು.
ಇಂದು ಆರೋಗ್ಯ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದೆನು.
ಸಭೆಯಲ್ಲಿ ಹಾಜರಿದ್ದ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು, ವಿವಿಧ ವಿಭಾಗಗಳ ಅಧಿಕಾರಿಗಳಿಂದ ಇಲಾಖೆಯಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಕ್ರಮಗಳು, ಯೋಜನೆಗಳ ಪ್ರಗತಿ ಬಗ್ಗೆ ಸಮಗ್ರವಾಗಿ ಮಾಹಿತಿಗಳನ್ನು ಪಡೆಯಲಾಯಿತು.… pic.twitter.com/VDZSgF1z6m
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 20, 2024
ಲಭ್ಯವಿರುವ ಹಣಕಾಸಿನ ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ. ಟೆಂಡರ್ ಪ್ರಕ್ರಿಯೆಗಳನ್ನ ಮಾರ್ಚ್ ತಿಂಗಳವರೆಗೆ ಯಾಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
“ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮುಲಾಜೂ ನಮಗಿಲ್ಲ. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆಯ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನ ನೀಡಲಾಗಿದೆ. ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳುವುದಾಗಿ” ಸಚಿವ ದಿನೇಶ್ ಗುಂಡೂರಾವ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಖರಿ, ಇ – ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ದತಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇದೇ ವೇಳೆ ಸಚಿವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಎನ್.ಎಚ್.ಎಮ್. ಎಂ.ಡಿ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.





