“ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ. ಇದು ದ್ರೋಹ. ಅನಿವಾರ್ಯವಾಗಿ ದೆಹಲಿಗೆ ಬಂದು ಪ್ರತಿಭಟನೆ ನಡೆಸಬೇಕಾಯಿತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ದ್ರೋಹ, ವಂಚನೆ ಖಂಡಿಸಿ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.
“ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ತಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ” ಎಂದು ಪ್ರಶ್ನಿಸಿದ ಸಿಎಂ, “ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಮ್ಮ ಪ್ರತಿಭಟನೆ” ಎಂದು ಮುಖ್ಯಮಂತ್ರಿ ತಿಳಿಸಿದರು.
“ಮೋದಿ ಅವರು ಪ್ರಧಾನಿ ಆದ ಬಳಿಕ ರಚಿಸಲಾದ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಯಿತು. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ” ಎಂದು ಸಿಎಂ ತಿಳಿಸಿದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಭಾಗವಹಿಸಿದ್ದಾರೆ. pic.twitter.com/skyphJd5Nn
— eedina.com (@eedinanews) February 7, 2024
“ನಾವು ಕನ್ನಡಿಗರು 430000 ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಾಸ್ ಬರುವುದು ಕೇವಲ 50,000 ಕೋಟಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ?” ಎಂದು ಕೇಳಿದರು.
“15 ನೇ ಹಣಕಾಸು ಆಯೋಗದಿಂದಾಗಿ ನಮಗೆ 62098 ಕೋಟಿ ರೂ ನಮಗೆ ತೆರಿಗೆಯೊಂದರಲ್ಲೇ ನಮಗೆ ಅನ್ಯಾಯ ಆಗಿದೆ. ಇದನ್ನು ನಾವು ಪ್ರಶ್ನಿಸಬಾರದಾ? ಈ ಕಾರಣಗಳಿಗೇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹವನ್ನು ಮರೆ ಮಾಚಲು ನೋಡುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಈ ಪ್ರಮಾಣದಲ್ಲೂ ನಮಗೆ ಹಂಚಿಕೆ ಆಗಿಲ್ಲ. ಇದನ್ನು ಕೇಂದ್ರದ ಅಂಕಿ ಅಂಶಗಳೇ ಹೇಳುತ್ತಿವೆ” ಎಂದು ಸಿಎಂ ತಿಳಿಸಿದರು.
ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲ ಶಾಸಕರು, ಸಚಿವರು ಭಾಗವಹಿಸಿದ್ದರು.@INCKarnataka @BJP4Karnataka @nsitharaman @nsitharamanoffc pic.twitter.com/mALgYbWnWI
— eedina.com (@eedinanews) February 7, 2024
ಕಳೆದ 10 ವರ್ಷಗಳಿಂದ ಹಂತ ಹಂತವಾಗಿ ರಾಜ್ಯದ ಪಾಲಿನ ತೆರಿಗೆ ಪಾಲು, ಕೇಂದ್ರದ ಅನುದಾನದ ಪಾಲು ನಿರಂತರವಾಗಿ ಕಡಿಮೆ ಆಗುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರತೀ ವರ್ಷದ ಅಂಕಿ ಅಂಶಗಳೊಂದಿಗೆ ವಿವರಿಸಿದರು.
“ಕೇಂದ್ರದ ಬಜೆಟ್ ಗಾತ್ರ ದುಪ್ಪಟ್ಟಾಗಿದೆ. ಆದರೆ ರಾಜ್ಯದ ಪಾಲಿನ ತೆರಿಗೆ ಪಾಲು ಅರ್ಧಕ್ಕಿಂತ ಕಡಿಮೆ ಆಗಿದೆ. ನಮ್ಮ ಪಾಲು ದುಪ್ಪಟ್ಟಾಗಬೇಕಾದ ಜಾಗದಲ್ಲಿ ಅರ್ಧಕ್ಕಿಂತ ಕಡಿಮೆ ಆಗಿರುವುದು ಅನ್ಯಾಯ ಅಲ್ಲವೇ? ಜಿಎಸ್ಟಿಯಲ್ಲಿ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಇನ್ನೂ ಬೃಹತ್ತಾಗಿದೆ. ಜಿಎಸ್ಟಿಯಲ್ಲಿ ಆಗುವ ಅನ್ಯಾಯವನ್ನು ವಿಶೇಷ ಪರಿಹಾರ ಕೊಟ್ಟು ಸರಿದೂಗಿಸುವುದಾಗಿ ಹೇಳಿದರು. ಈಗ ಪರಿಹಾರ ಕೊಡುತ್ತಿಲ್ಲ. ಇದರಿಂದ 59000 ಕೋಟಿಗೂ ಅಧಿಕ ಅನ್ಯಾಯ, ವಂಚನೆ ಆಯಿತು” ಎಂದು ಸಿಎಂ ದೂರಿದರು.





