ತಮಿಳು ಚಿತ್ರರಂಗದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿ ವೇಳೆ ತಮಿಳುನಾಡಿನ ಕರೂರಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಸಾವುಗಳ ಸಂಖ್ಯೆ ಇನ್ನೂ ಏರಿಕೆ ಆಗಬಹುದು ಎಂದು ಹೇಳಲಾಗುತ್ತಿದೆ. ಕಾಲ್ತುಳಿತ ಪ್ರಕರಣದ ತನಿಖೆಗಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತನಿಖಾ ಆಯೋಗವನ್ನು ರಚಿಸಿದ್ದಾರೆ.
2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೊಸದಾಗಿ ಟಿವಿಕೆ ಪಕ್ಷ ಕಟ್ಟಿರುವ ನಟ ವಿಜಯ್, ರಾಜ್ಯದಾದ್ಯಂತ ಬೃಹತ್ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಶನಿವಾರ ಕರೂರಿನಲ್ಲಿ ವಿಜಯ್ ಬೃಹತ್ ಸಮಾವೇಶ ಆಯೋಜಿಸಿದ್ದರು. ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಈ ವೇಳೆ, ಕಾಲ್ತುಳಿತ ದುರಂತ ಸಂಭವಿಸಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಶನಿವಾರ ರಾತ್ರಿಯೇ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಮೃತರ ಕುಟುಂಬಸ್ಥರಿಗೂ ಸಾಂತ್ವನ ಹೇಳಿದ್ದಾರೆ.
ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ.
ದುರಂತದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸುವುದಾಗಿಯೂ ಸ್ಟಾಲಿನ್ ಘೋಷಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ಈದಿನ.ಕಾಮ್ ಗ್ರೌಂಡ್ ರಿಪೋರ್ಟ್ |ತೆವಳುತ್ತಿರುವ ಜಾತಿವಾರು ಸಮೀಕ್ಷೆ- ಸಮಸ್ಯೆಗಳ ಸುರಿಮಳೆ, ಶೇ.2ರಷ್ಟು ಗುರಿ ಮುಟ್ಟಲೂ ವಿಫಲ!
ದುರಂತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, “ಇದು ಅತ್ಯಂತ ದುಖಃದ ವಿಷಯ. ಭರಿಸಲಾಗದ ನಷ್ಟ” ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ತಮಿಳುನಾಡಿನ ಡಿಜಿಪಿ (ಪ್ರಭಾರ) ಆರ್ ವೆಂಕಟರಾಮನ್, “ಘಟನೆಯಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 35 ಮೃತದೇಹಗಳನ್ನು ಗುರುತಿಸಲಾಗಿದ್ದು, ನಾಲ್ಕು ಮೃತದೇಹಗಳ ಗುರುತು ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.
ಸುಮಾರು 111 ಮಂದಿ ಗಾಯಗೊಂಡಿದ್ದು, ಕರೂರು ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




