ಸಂದೇಶ್ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 30ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಟಿಎಂಸಿ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಕೇವಲ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 1 ಸ್ಥಾನದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
ಟಿಎಂಸಿ ಇಂದ ಸ್ಪರ್ಧಿಸಿದ್ದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಕಾಂಗ್ರೆಸ್ನ ಅಧೀರ್ ಚೌಧರಿ ವಿರುದ್ಧ 3,000 ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ 3.14 ಲಕ್ಷಕ್ಕೂ ಹೆಚ್ಚು ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕೃಷ್ಣಾನಗರದಲ್ಲಿ ಸಂಸತ್ನಲ್ಲಿ ಉಚ್ಚಾಟನೆಗೊಂಡಿದ್ದ ಟಿಎಂಸಿಯ ಮಹುವಾ ಮೊಯಿತ್ರಾ ಭಾರೀ ಮುನ್ನಡೆಯಲ್ಲಿದ್ದಾರೆ.




