ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
2022ರಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಯೋಧರ ಬಗ್ಗೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು ಎಂದು ರಾಹುಲ್ ಗಾಂಧಿ ಪರ ವಕೀಲ ಪ್ರಾಂಶು ಅಗರ್ವಾಲ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಮೋದಿ ಉಪನಾಮ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ರಾಹುಲ್ ಗಾಂಧಿ ಅವರು ಹಾಜರಾದ ನಂತರ, ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ನ್ಯಾಯಾಲಯದ ನಿರ್ದೇಶನದಂತೆ ಗಾಂಧಿಯವರು ಜಾಮೀನು ಬಾಂಡ್ ಮತ್ತು ಶ್ಯೂರಿಟಿಗಳನ್ನು ಸಲ್ಲಿಸಿದ ನಂತರ ಜಾಮೀನು ನೀಡಲಾಯಿತು ಎಂದು ವಕೀಲರು ತಿಳಿಸಿದ್ದಾರೆ.
ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯನ್ನು ಪರಿಗಣಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಆರೋಪಿಯನ್ನಾಗಿ ಸಮನ್ಸ್ ನೀಡಲಾಗಿದೆ. ಗಾಂಧಿಯವರು ಈ ಹಿಂದೆ ಪರಿಹಾರ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರೈ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಗಡಿ ರಸ್ತೆಗಳ ಸಂಸ್ಥೆಯ ನಿವೃತ್ತ ನಿರ್ದೇಶಕ (ಸೇನೆಯಲ್ಲಿ ಕರ್ನಲ್ ಹುದ್ದೆಗೆ ಸಮಾನ) ಉದಯ್ ಶಂಕರ್ ಶ್ರೀವಾಸ್ತವ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2022ರ ಡಿಸೆಂಬರ್ 16ರಂದು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ನಡುವಿನ ಘರ್ಷಣೆಯ ಬಗ್ಗೆ ಪ್ರಸ್ತಾಪಿಸಿದ್ದರು. “ಜನರು ಭಾರತ್ ಜೋಡೋ ಯಾತ್ರೆಯ ಬಗ್ಗೆ ಏನು ಕೇಳುತ್ತಾರೆ? ಆದರೆ ನಮ್ಮ ಯೋಧರನ್ನು ಚೀನಾ ಸೈನಿಕರು ಹೊಡೆದ ಬಗ್ಗೆ ಒಮ್ಮೆಯೂ ಕೇಳುವುದಿಲ್ಲ” ಎಂದು ಹೇಳಿದ್ದರು. ಈ ಹೇಳಿಕೆಯು ತಮ್ಮ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.





